ದೀಪಾವಳಿ ಸಂದರ್ಭದಲ್ಲಿ ಬೆಂಗಳೂರಿನಿಂದ ನಿಮ್ಮ ನಿಮ್ಮ ಸ್ವಂತ ಊರುಗಳಿಗೆ ತೆರಳುತ್ತಿದ್ದೀರಾ ಹಾಗಾದ್ರೆ ನಿಮಗಿಲ್ಲಿದೆ ಗುಡ್ ನ್ಯೂಸ್ 

ಬೆಂಗಳೂರು :  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನ.2ರಿಂದ 5ರ ವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ 1500 ಹೆಚ್ಚುವರಿ ಬಸ್‌ ವ್ಯವಸ್ಥೆ ಕಲ್ಪಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡಲಾಗುವುದು.

ಮೈಸೂರು ರಸ್ತೆಯ ಸ್ಯಾಟಲೆಟ್‌ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಹಾಗೂ ಶಾಂತಿನಗರದ ಕೇಂದ್ರ ಘಟಕ 2 ಮತ್ತು 4ರ ಮುಂಭಾಗದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ವಿವಿಧ ಸ್ಥಳಗಳಿಗೆ ಬಸ್‌ ಕಾರ್ಯಾಚರಣೆ ಇರಲಿದೆ. 

ಅಂತೆಯೇ ನಗರದ ಪೀಣ್ಯದ ಬಸವೇಶ್ವರ ಬಸ್‌ ನಿಲ್ದಾಣ, ಜಯನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡರಸ್ತೆ, ಬನಶಂಕರಿ, ಜೀವನ್‌ ಬೀಮಾನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರ ಮೊದಲಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮೊದಲಾದ ಸ್ಥಳಗಳಿಗೆ ಬಸ್‌ ಕಾರ್ಯಾಚರಣೆ ಮಾಡಲಾಗುವುದು. ಹಬ್ಬದ ಬಳಿಕ ನ.11ರಂದು ರಾಜ್ಯ ಮತ್ತು ಅಂತರ್‌ ರಾಜ್ಯದ ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಬಸ್‌ ಸೌಲಭ್ಯ ಕಲ್ಪಿಸುವುದಾಗಿ ಕೆಎಸ್‌ಆರ್‌ಟಿಸಿ ತಿಳಿಸಿದೆ.