ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ರಾಹುಲ್ ಗಾಂಧಿ ಸ್ಪರ್ಧೆ ?
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಾರೆ ಎನ್ನುವ ಗುಸು ಗುಸು ಆರಂಭವಾಗಿದೆ.
ಬೀದರ್ : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಹಿಂದೆ ಬಳ್ಳಾರಿಯಿಂದ ಸ್ಪರ್ಧೆ ಮಾಡಿದ್ದಂತೆ ಇದೀಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬೀದರ್ ಲೋಕಸಭಾ ಕ್ಷೇತ್ರದ ಕಡೆಗೆ ಕಣ್ಣು ನೆಟ್ಟಿದ್ದಾರೆಯೇ ಎಂಬ ಬಗ್ಗೆ ಗುಸುಗುಸು ಆರಂಭವಾಗಿದೆ.
ಆ.13ರಂದು ಬೀದರ್ನಲ್ಲಿ ಕಾಂಗ್ರೆಸ್ ಆಯೋಜಿಸಿರುವ ‘ಜನಧ್ವನಿ’ ಸಮಾವೇಶ ಈ ಸ್ಪರ್ಧೆಗೆ ತಯಾರಿಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ‘ರಾಹುಲ್ ಗಾಂಧಿ ಬೀದರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಈಗಲೇ ಹೇಳಕ್ಕಾಗಲ್ಲ. ಅವರು ಎಲ್ಲಿ ಬೇಕಾದರೂ ಕಣಕ್ಕಿಳಿಯಬಹುದು ಅದು ಅವರಿಗೆ ಬಿಟ್ಟತೀರ್ಮಾನ, ನಾನು ಹೇಳಕ್ಕಾಗಲ್ಲ’ ಎಂದು ಹೇಳಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಈಶ್ವರ ಖಂಡ್ರೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ಕೊಡುಗೆ ನೀಡಿದ ಕಾರಣಕ್ಕಾಗಿ ರಾಹುಲ್ ಗಾಂಧಿ ಅವರನ್ನು ಅಭಿನಂದಿಸುವ ಸಲುವಾಗಿ ಸಮಾವೇಶ ಆಯೋಜಿಸಲಾಗಿದೆ. ಆ ಸಮಾವೇಶದ ಮೂಲಕ ಲೋಕಸಭಾ ಚುನಾವಣೆಯ ರಣಕಹಳೆ ಊದಲಾಗುತ್ತದೆ ಎಂದರು.
ಆ.13ರ ಸೋಮವಾರ ಬೆಳಿಗ್ಗೆ 11ಕ್ಕೆ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಸಮಾವೇಶಕ್ಕೆ ನೇರವಾಗಿ ರಾಹುಲ್ ಗಾಂಧಿ ಆಗಮಿಸಲಿದ್ದು ಮಧ್ಯಾಹ್ನ 2.30ರ ಸುಮಾರಿಗೆ ತೆಲಂಗಾಣ ರಾಜ್ಯದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದು ವಿವರಿಸಿದರು.