ಡೀಸೆಲ್ ದರ ಏರಿಕೆ ಹಾಗೂ ಥರ್ಡ್ ಪಾರ್ಟಿ ಪ್ರೀಮಿಯಂ ದರ ಹೆಚ್ಚಳ ವಿರೋಧಿಸಿ ಅಖಿಲ ಭಾರತ ಟ್ರಕ್ ಮಾಲೀಕರ ಒಕ್ಕೂಟ ಸೋಮವಾರದಿಂದ ದೇಶವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವುದರಿಂದ ರಾಜ್ಯದಲ್ಲೂ ಸರಕು-ಸಾಗಣೆ ಸ್ಥಗಿತವಾಗಿ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. 

ಬೆಂಗಳೂರು : ಡೀಸೆಲ್ ದರ ಏರಿಕೆ ಹಾಗೂ ಥರ್ಡ್ ಪಾರ್ಟಿ ಪ್ರೀಮಿಯಂ ದರ ಹೆಚ್ಚಳ ವಿರೋಧಿಸಿ ಅಖಿಲ ಭಾರತ ಟ್ರಕ್ ಮಾಲೀಕರ ಒಕ್ಕೂಟ ಸೋಮವಾರದಿಂದ ದೇಶವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವುದರಿಂದ ರಾಜ್ಯದಲ್ಲೂ ಸರಕು-ಸಾಗಣೆ ಸ್ಥಗಿತವಾಗಿ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದಲ್ಲಿ ಪ್ರತಿನಿತ್ಯ ಸುಮಾರು ಏಳು ಲಕ್ಷ ಸರಕು ಸಾಗಣೆ ವಾಹನಗಳು ರಾಜ್ಯ ಹಾಗೂ ಅಂತರ್ ರಾಜ್ಯಗಳ ನಡುವೆ ಸಂಚರಿಸುತ್ತವೆ. ಮುಷ್ಕರದ ಹಿನ್ನೆಲೆಯಲ್ಲಿ ಎಲ್ಲ ಸರಕು ಸಾಗಣೆ ವಾಹನಗಳು ಸಂಚಾರ ಸ್ಥಗಿತಗೊಳಿಸುವ ಸಾಧ್ಯತೆಯಿದೆ. ಇದರಿಂದ ಆಹಾರ ಪದಾರ್ಥಗಳು, ಕಟ್ಟಡ ನಿರ್ಮಾಣ ಸಾಮಗ್ರಿಗಳು ಸೇರಿದಂತೆ ಎಲ್ಲ ಮಾದರಿಯ ಸರಕು ಸಾಗಣೆಯಲ್ಲಿ ವ್ಯತ್ಯಯವಾಗಲಿದೆ.

ಅನಿರ್ದಿಷ್ಟಾವಧಿ ಅವಧಿಗೆ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಸೋಮವಾರದ ಬಳಿಕ ಮುಷ್ಕರದ ಬಿಸಿ ಜನರಿಗೆ ತಟ್ಟಲಿದೆ. ಪೆಟ್ರೋಲ್-ಡೀಸೆಲ್ ದರ ಪ್ರತಿ ನಿತ್ಯ ಹೆಚ್ಚಳವಾಗುತ್ತಿರುವುದರಿಂದ ವಾಹನಗಳ ಸಂಚಾರ ಕಷ್ಟವಾಗಿದೆ. ಇನ್ನು ಥರ್ಡ್ ಪಾರ್ಟಿ ಪ್ರೀಮಿಯಂ ದರವನ್ನು ಕೂಡ ಕೇಂದ್ರ ಸರ್ಕಾರ ಮನಸೋ ಇಚ್ಛೆ ಏರಿಸಿದೆ. ಇದರಿಂದ ಲಾರಿ ಮಾಲೀಕರಿಗೆ ಹೊಡೆತ ಬಿದ್ದಿದೆ. ಡಿಸೇಲ್ ದರ ಮತ್ತು ಪ್ರೀಮಿಯಂ ದರ ಇಳಿಸುವಂತೆ ದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ದೇಶವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರ ಅನಿವಾರ್ಯ ಎಂದು ಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘಗಳ ಮಹಾ ಒಕ್ಕೂಟದ ಅಧ್ಯಕ್ಷ ಬಿ.ಚೆನ್ನಾರೆಡ್ಡಿ ತಿಳಿಸಿದರು.

ಜನರಿಗೆ ಅತ್ಯವಶ್ಯವಾದ ಹಾಲು, ಔಷಧಿ ಸಾಗಣೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಇದನ್ನು ಹೊರತುಪಡಿಸಿ ಎಲ್ಲ ಮಾದರಿಯ ಸರಕು ಸಾಗಣೆ ಸ್ಥಗಿತಗೊಳ್ಳಲಿದೆ. ರಾಷ್ಟ್ರಮಟ್ಟದ ಸಂಘಟನೆ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಅಲ್ಲಿಂದ ಸೂಚನೆ ಬರುವವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ಹೇಳಿದರು.