ರಾಷ್ಟ್ರ ರಾಜಕಾರಣಕ್ಕೆ ದೀದಿ ಬಿಗ್ ಪ್ಲಾನ್
ರಾಷ್ಟ್ರ ರಾಜಕಾರಣಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊಸ ಪ್ಲಾನ್ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಅವರು ಬುಧವಾರ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆ.
ಬೆಂಗಳೂರು : ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಎದುರಿಸುವ ಪ್ರತಿಪಕ್ಷಗಳ ಕಾರ್ಯತಂತ್ರದ ಭಾಗವಾಗಿ ತೃಣಮೂಲ ಕಾಂಗ್ರೆಸ್ನ ಅಧ್ಯಕ್ಷೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ದೇವೇಗೌಡ ಅವರನ್ನು ಬುಧವಾರ ಭೇಟಿಯಾಗಿ ಸುಮಾರು 25 ನಿಮಿಷ ಮಾತುಕತೆ ನಡೆಸಿದ ಮಮತಾ ಬ್ಯಾನರ್ಜಿ, ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ನಿಟ್ಟಿನಲ್ಲಿ ಜಾತ್ಯಾತೀತ ಪಕ್ಷಗಳು ಚುನಾವಣೆಯನ್ನು ಒಟ್ಟಾಗಿ ಎದುರಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲು ಬಂದಿದ್ದೇನೆ.
ಜಾತ್ಯಾತೀತ ಪಕ್ಷಗಳು ಒಗ್ಗೂಡಬೇಕು ಎಂದರು. ಬಳಿಕ ಮಾತನಾಡಿದ ದೇವೇಗೌಡ, ಜಾತ್ಯಾತೀತ ಶಕ್ತಿಗಳನ್ನು ಒಂದು ಗೂಡಿಸುವ ಪ್ರಯತ್ನವನ್ನು ಮಮತಾ ಮಾಡುತ್ತಿದ್ದು ಅವರಿಗೆ ನಮ್ಮ ಬೆಂಬಲವಿದೆ ಎಂದರು.