‘ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಗ್ಯಾರಂಟಿ'
ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋದು ಕನ್ಫರ್ಮ್ ಎಂದು ನಾಯಕರೋರ್ವರು ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿ [ಜು.04] : ಉತ್ತರ ಕರ್ನಾಟಕ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ನಂಜುಂಡಪ್ಪ ವರದಿಯನ್ನು ಸರಿಯಾಗಿ ಅನುಷ್ಠಾನ ಮಾಡಿಲ್ಲ. ಮಹದಾಯಿ ವಿಷಯದಲ್ಲಿ ಸರ್ಕಾರ ಏನು ಮಾಡಿದೆ ಎಂದು ಕನ್ನಡ ಪರ ಸಂಘಟನೆ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರಶ್ನೆ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ವಾಟಾಳ್ ಜಿಂದಾಲ್ ಉಳಿಸಿಕೊಳ್ಳಲು ಒಬ್ಬ ಮಂತ್ರಿಯನ್ನು ನೇಮಕ ಮಾಡುತ್ತಾರೆ. ಅದೇ ಮಹದಾಯಿ ವಿಷಯದಲ್ಲಿ ಓರ್ವ ಮಂತ್ರಿಯನ್ನು ನೇಮಕ ಮಾಡಿಲ್ಲ. ಈ ನಿಟ್ಟಿನಲ್ಲಿ ಆಗಸ್ಟ್ 12 ರಂದು ಉತ್ತರ ಕರ್ನಾಟಕದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟ ಮಾಡುತ್ತೇನೆ. ಈ ವೇಳೆ ಉತ್ತರ ಕರ್ನಾಟಕಕ್ಕೆ ನೀರು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಲಾಗುವುದು ಎಂದರು.
ರಾಜೀನಾಮೆ ವಿಚಾರ ಪ್ರಸ್ತಾಪ : ಇನ್ನು ರಮೇಶ್ ಜಾರಕಿಹೊಳಿ ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ನೀಡಿದ ಹಿನ್ನೆಲೆ ಪ್ರತಿಕ್ರಿಯಿಸಿ, ರಾಜೀನಾಮೆಯನ್ನು ಹಾದಿ ಬೀದಿಯಲ್ಲಿ ಹೋಗುವವರಿಗೆ ನೀಡಲು ಆಗಲ್ಲ. ಸ್ಪೀಕರ್ ಅವರಿಗೆ ಕೊಡಬೇಕು. ಈ ರೀತಿ ರಾಜ್ಯಪಾಲರ ಬಳಿ ನೀಡುವುದೆಲ್ಲಾ ಬ್ಲಾಕ್ ಮೇಲೆ ತಂತ್ರ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ಬಿಜೆಪಿ ಮುಖಂಡರ ವಿರುದ್ಧವೂ ವಾಗ್ದಾಳಿ ನಡೆಸಿದ ವಾಟಾಳ್ ನಾಗರಾಜ್ , ಬಿಜೆಪಿಯವರ ನಡೆ ಸರಿಯಾಗಿಲ್ಲ. ಬಿಜೆಪಿ ಬಹಿರಂಗ ವ್ಯಾಪಾರಕ್ಕೆ ಇಳಿದಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋದು ಗ್ಯಾರಂಟಿ ಎಂದು ವಾಟಾಳ್ ಹೇಳಿದರು.