ಸಿಎಂ ಕುಮಾರಸ್ವಾಮಿ ವಿರುದ್ಧ ಮತ್ತೆ ಸಮರ ಸಾರಿದ ಕಾಂಗ್ರೆಸ್ ಸಚಿವ
ಪ್ರತಿಷ್ಠಿತ ಜಿಂದಾಲ್ ಕಂಪನಿಗೆ ಭೂಮಿ ನೀಡಿರುವ ಸಂಪುಟದ ನಿರ್ಣಯ ವಿರೋಧಿಸಿದ್ದ ಮಾಜಿ ಸಚಿವ ಎಚ್.ಕೆ.ಪಾಟೀಲ್ , ಈಗ ಕುಡಿಯುವ ನೀರಿನ ದರ ಏರಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, (ಜೂನ್.08): ಅನ್ನಭಾಗ್ಯದ ರೀತಿಯಲ್ಲೇ ಕುಡಿಯುವ ನೀರನ್ನು ಕಡಿಮೆ ದರದಲ್ಲಿ ನೀಡಬೇಕೆಂದು ಮಾಜಿ ಸಚಿವ ಎಚ್.ಕೆ ಪಾಟೀಲ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ರಾಜ್ಯಸರ್ಕಾರಕ್ಕೆ ಪತ್ರ ಬರೆದಿರುವ ಎಚ್.ಕೆ ಪಾಟೀಲ್, " ರಾಜ್ಯದ ಬಡ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ಸರ್ಕಾರದ ಮುಖ್ಯ ಜವಾಬ್ದಾರಿ. ಅದಕ್ಕಾಗಿಯೇ ಸರ್ಕಾರ ಪ್ರತೀ ಲೀಟರ್ ನೀರಿಗೆ 10 ಪೈಸೆಯಂತೆ ಶುದ್ಧ ಕುಡಿಯುವ ನೀರು ಒದಗಿಸುತ್ತಿದೆ. ಆದರೆ, ಇದೀಗ ನೀರಿನ ದರವನ್ನು ಪ್ರತಿ ಲೀಟರ್ ಗೆ 25 ಪೈಸೆಗೆ ಹೆಚ್ಚಿಸಲು ಮುಂದಾಗಿರುವ ಕ್ರಮ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಂದಾಲ್ಗೆ ಭೂಮಿ ನೀಡಿಕೆ : ತೀವ್ರ ವಿರೋಧ
ಕುಡಿಯುವ ನೀರಿನ ದರವನ್ನು ಹೆಚ್ಚಿಸುವುದು ಕಾಂಗ್ರಸ್ ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾದದ್ದು. ಇದನ್ನು ಕೂಡಲೇ ಪರಿಶೀಲಿಸಿ ಕುಡಿಯುವ ನೀರಿದ ದರ ಏರಿಕೆ ಕ್ರಮವನ್ನು ಹಿಂತೆಗೆದುಕೊಳ್ಳಬೇಕೆಂದು ಅವರು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.
ಶುದ್ಧ ಕುಡಿಯುವ ನೀರಿನ ಪೂರೈಕೆ ದರ ಹೆಚ್ಚಳ ಮಾಡದಿರಲು ಆಗ್ರಹಿಸುವೆ. pic.twitter.com/LbMr3KkVSe
— HK Patil (@HKPatil1953) June 8, 2019
ತಮ್ಮ ಟ್ವಿಟರ್ನಲ್ಲೂ ಸರ್ಕಾರಕ್ಕೆ ಸಲ್ಲಿಸಿರುವ ಪತ್ರದ ಪ್ರತಿಯಯನ್ನು ಪೋಸ್ಟ್ ಮಾಡಿದ್ದಾರೆ. ಈ ಹಿಂದೆ ಪಾಟೀಲ್ ಅವರು ಜಿಂದಾಲ್ ವಿಚಾರವಾಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.