ಬಿಜೆಪಿಯವರು ಈ ರೀತಿ ಕೃತ್ಯ ಎಸಗುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕೈ ನಾಯಕರೋರ್ವರು ಹರಿಹಾಯ್ದಿದ್ದಾರೆ.
ಬೆಳಗಾವಿ : ಬಿಜೆಪಿ ನಾಯಕರು ಆಪರೇಷನ್ ಕಮಲ ಮಾಡಿ ಶಾಸಕರನ್ನ ಖರೀದಿ ಮಾಡುತ್ತಿರುವುದು ಸೂಕ್ತವಲ್ಲ. ಇಂತಹ ಕೃತ್ಯ ಮಾಡುತ್ತಿರುವುದು ನಾಚಿಕೆ ಗೇಡಿನ ಸಂಗತಿ ಎಂದು ಸಚಿವ ಆರ್.ಬಿ.ತಿಮ್ಮಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು ಜನ ಮೋದಿ ಬಗ್ಗೆ ಒಳ್ಳೆಯ ಅಭಿಪ್ರಾಯ ಇರಿಸಿಕೊಂಡು ಮತ ನೀಡಿದ್ದಾರೆ. ಅದನ್ನು ಉಳಿಸಿಕೊಳ್ಳಲಿ. ಜನತೆಗೆ ಒಳ್ಳೆಯದು ಮಾಡಲಿ ಎಂದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿಯವರು ಅಧಿಕಾರಕ್ಕೆ ಬರುತ್ತೇವೆ ಅನ್ನುತ್ತಿದ್ದರು. ಉದ್ಧಟತನದಿಂದ ಬಿಜೆಪಿ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುತ್ತಿದ್ದರು. ಸಮ್ಮಿಶ್ರ ಸರ್ಕಾರ ಅನೈತಿಕ ಸಂಬಂಧ ಅಲ್ಲ. ಸಂವಿಧಾನ ಬದ್ಧವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಅಡಿಯಲ್ಲಿ ಸರ್ಕಾರ ರಚನೆ ಆಗಿದೆ. ಜನರಿಗೆ ಮರಳು ಮಾಡುವ ರೀತಿಯಲ್ಲಿ ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಮೈತ್ರಿಮಾಡಿಕೊಂಡಿದ್ದಕ್ಕೆ ಕಾಂಗ್ರೆಸ್ ಗೆ ಕಡಿಮೆ ಸೀಟು ಬಂದಿಲ್ಲ. ಸಮ್ಮಿಶ್ರ ಸರ್ಕಾರ ಇದ್ದಾಗ ಏರುಪೇರು ಆಗುವುದು ಸಹಜ. ಭಿನ್ನಾಭಿಪ್ರಾಯ ಇರುತ್ತವೆ, ಏರುಪೇರು ಆಗುವುದು ಸ್ವಾಭಾವಿಕ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ, ನ ಸಮ್ಮಿಶ್ರ ಸರ್ಕಾರ ಇರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
