ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಪ್ರವಾಹ ಪರಿಸ್ಥಿತಿಯಿಂದ ಹಲವು ಜಿಲ್ಲೆಗಳು ತತ್ತರಿಸಿವೆ. ಇದೇ ವೇಲೆ ಶಾಸಕರೋರ್ವರು ತಮ್ಮ ತಿಂಗಳ ವೇತನ ಸಂತ್ರಸ್ತರ ನೆರವಿಗೆ ನೀಡುವುದಾಗಿ ಘೋಷಿಸಿದ್ದಾರೆ.

ವಿಜಯಪುರ (ಆ.08): ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಅನೇಕ ಜಿಲ್ಲೆಗಳು ವರುಣನ ಅಬ್ಬರಜ್ಜೆ ತತ್ತರಿಸಿವೆ. ಪ್ರವಾಹ ಸಂತ್ರಸ್ತರ ನೆರವಿಗೆ ಹಲವರು ನಿಂತಿದ್ದು, ಇದೀಗ ಶಾಸಕರೋರ್ವರು ನೆರವು ನೀಡುವುದಾಗಿ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರವಾಹದಲ್ಲಿ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ಜನತೆಗೆ ನೆರವಾಗುವ ದೃಷ್ಟಿಯಿಂದ ಒಂದು ತಿಂಗಳ ವೇತನ ನೀಡುವುದಾಗಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ತಿಳಿಸಿದರು.

ಇಲ್ಲಿಯವರೆಗೂ ರಾಜ್ಯದಲ್ಲಿ ಮಳೆ ಇಲ್ಲವೆಂದು ಪರಿತಪಿಸಿದ್ದೇವೆ. ಆದರೆ ಈಗ ಪ್ರವಾಹ ಎದುರಾಗಿ ಪರಿಸ್ಥಿತಿ ಗಂಭೀರವಾಗಿದೆ. ಬಹುತೇಕರು ಸೂರು ಕಳೆದುಕೊಂಡಿದ್ದಾರೆ. ನೆಲೆ ಇಲ್ಲದೇ ಪರದಾಡುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ನಡೆಸಿ ನೆರವು ನೀಡಲು ಸಿದ್ಧರಾಗಿದ್ದಾರೆ ಎಂದರು. 

ಕೇಂದ್ರ ಹಣಕಾಸು ಸಚಿವಾಲಯ ಹಾಗೂ ಪ್ರಧಾನಿಯವರಿಗೆ ಮುಖ್ಯಮಂತ್ರಿ ಮನವರಿಕೆ ಮಾಡಿ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದ ಬಳಿ ಪರಿಹಾರಕ್ಕೆ ವಿನಂತಿಸಿದ್ದಾರೆ. ಜೊತೆಗೆ ಸಂತ್ರಸ್ತರಿಗೆ ನೈತಿಕ ಮನೋಬಲ ತುಂಬಿದ್ದಾರೆ ಎಂದು ಶಹಾಪುರ ಹೇಳಿದರು. 

ಅಲ್ಲದೇ ತಾವು ಒಂದು ತಿಂಗಳ ವೇತನ ನೆರವಾಗಿ ನೀಡುತ್ತಿದ್ದು, ಕಾರ್ಪೊರೇಟ್ ಸಂಸ್ಥೆಗಳು ಸಂತ್ರಸ್ಥರ ನೆರವಿಗೆ ಬಂದು ಕಣ್ಣೀರೊರೆಸುವ ಕೆಲಸ ಮಾಡಬೇಕು ಎಂದು ಇದೇ ವೇಳೆ ವಿಧಾನಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಅರುಣ ಶಹಾಪುರ ಹೇಳಿದರು.