JNU ದಾಳಿಯ ಹಿಂದೆ ಮೋದಿ, ಶಾ ಕೈವಾಡ: ಖಂಡ್ರೆ
JNU ವಿಶ್ವವಿದ್ಯಾಲಯದಲ್ಲಿ ನಡೆದಿರುವ ಮಾರಣಾಂತಿಕ ಹಲ್ಲೆ ಹಾಗೂ ಗಲಭೆಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈವಾಡ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.
ಬೆಂಗಳೂರು(ಜ.08): JNU ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ಹಾಗೂ ಗಲಭೆಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈವಾಡ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಬಿವಿಪಿ ಹಾಗೂ ಆರ್ಎಸ್ಎಸ್ ಸಂಘಟನೆಗಳಿಒಂದಲೇ ಈ ಹಲ್ಲೆ ನಡೆದಿದೆ. ಜೆಎನ್ಯು ಮುಗ್ದ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ನಡೆದಿರುವ ಹಲ್ಲೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಇದೊಂದು ಸರ್ಕಾರಿ ಪ್ರಾಯೋಜಿತ ಕೆಲಸ. ಆರ್ಎಸ್ಎಸ್ ಮತ್ತು ಎಬಿವಿಪಿ ಕಾರ್ಯಕರ್ತರನ್ನು ಛೂ ಬಿಟ್ಟು ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
JNU ಹಿಂಸಾಚಾರ: ವೈರಲ್ ಆಯ್ತು ಆನಂದ್ ಮಹೀಂದ್ರಾ ಟ್ವೀಟ್!
ವಿ.ಎಸ್. ಉಗ್ರಪ್ಪ ಮಾತನಾಡಿ, ಯುವಕರ ಧ್ವನಿಯನ್ನ ಅಡಗಿಸುವ ಕೆಲಸವನ್ನ ಸರ್ಕಾರ ಮಾಡುತ್ತಿದೆ. ಭಯದ ವಾತಾವರಣ ನಿರ್ಮಿಸಿ ಎಲ್ಲರ ಧ್ವನಿಯನ್ನು ದಮನ ಮಾಡಲು ಬಿಜೆಪಿ ಹೊರಟಿದೆ. ಜೆಎನ್ಯು ದಾಳಿಯನ್ನು ಯಾವುದೇ ನಾಗರಿಕ ಸಮಾಜ ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.