ಗೋರಕ್ಷಣೆ ಹೆಸರಲ್ಲಿ ಮುಸಲ್ಮಾನರು ಹಾಗೂ ದಲಿತ ಸಮುದಾಯದ ಜನರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಗೋರಕ್ಷಣೆ ಹೆಸರಲ್ಲಿ ಹಿಂಸೆ ನಡೆಸುವವರ ವಿರುದ್ಧ ರಾಜ್ಯ ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇಂತಹ ವಿಚಾರಗಳಿಗೆ ರಾಜಕೀಯ ಅಥವಾ ಕೋಮು ಬಣ್ಣ ಬಳಿಯಬಾರದು ಎಂದು ಫರ್ಮಾನು ಹೊರಡಿಸಿದ್ದಾರೆ.

ನವದೆಹಲಿ(ಜು.17): ಗೋರಕ್ಷಣೆ ಹೆಸರಲ್ಲಿ ಮುಸಲ್ಮಾನರು ಹಾಗೂ ದಲಿತ ಸಮುದಾಯದ ಜನರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಗೋರಕ್ಷಣೆ ಹೆಸರಲ್ಲಿ ಹಿಂಸೆ ನಡೆಸುವವರ ವಿರುದ್ಧ ರಾಜ್ಯ ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇಂತಹ ವಿಚಾರಗಳಿಗೆ ರಾಜಕೀಯ ಅಥವಾ ಕೋಮು ಬಣ್ಣ ಬಳಿಯಬಾರದು ಎಂದು ಫರ್ಮಾನು ಹೊರಡಿಸಿದ್ದಾರೆ.

Add Asianetnews Kannada as a Preferred SourcegooglePreferred

ದೇಶದ ಹಲವು ಭಾಗಗಳಲ್ಲಿ ನಡೆಯುತ್ತಿರುವ ಇಂಥ ದಾಳಿಗಳಿಗೆ ಕೇಂದ್ರ ಸರ್ಕಾರವನ್ನೇ ಗುರಿ ಮಾಡುತ್ತಿರುವ ಹಿನ್ನೆಲೆಯಲ್ಲಿ, ಇದೀಗ ಕ್ರಮ ಕೈಗೊಳ್ಳುವ ಹೊಣೆಗಾರಿಕೆಯನ್ನು ರಾಜ್ಯಗಳ ಹೆಗಲಿಗೆ ವರ್ಗಾಯಿಸುವ ಮೂಲಕ ಪ್ರಧಾನಿ ಮೋದಿ ಒಂದೇ ಏಟಿಗೆ ಎರಡು ಹಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

ಸೋಮವಾರದಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗು ತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಸರ್ವಪಕ್ಷ ನಾಯಕರ ಸಭೆ ನಡೆಸಿದ ಮೋದಿ ಅವರು, ಹಲವು ಹಿಂದುಗಳಿಗೆ ಗೋವು ಎಂಬುದು ತಾಯಿ ಇದ್ದಂತೆ. ಆ ಕಾರಣಕ್ಕೆ ಜನರು ಕಾನೂನು ಕೈಗೆತ್ತಿಕೊಳ್ಳಲು ಅವಕಾಶವಿಲ್ಲ. ರಾಜ್ಯ ಸರ್ಕಾರಗಳು ಕಾನೂನು- ಸುವ್ಯವಸ್ಥೆ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಕಾನೂನು ಕೈಗೆತ್ತಿಕೊಳ್ಳುವ ಗೋರಕ್ಷಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಕರೆ ನೀಡಿದರು.

ಭ್ರಷ್ಟಾಚಾರ ಹಾಗೂ ಗೋರಕ್ಷಣೆ ಹೆಸರಿನಲ್ಲಿ ಉಂಟಾಗುವ ಕೋಮು ಹಿಂಸಾಚಾರಗಳನ್ನು ತಡೆಯಲು ಪ್ರತಿಪಕ್ಷಗಳು ಸಹಕಾರ ನೀಡಬೇಕು ಎಂದು ಇದೇ ವೇಳೆ ಪ್ರಧಾನಿಗಳು ಮನವಿ ಮಾಡಿದರು ಎಂದು ಸಭೆಯ ನಂತರ ಕೇಂದ್ರ ಸಚಿವ ಅನಂತಕುಮಾರ್ ತಿಳಿಸಿದರು. ದೇಶದ ವಿವಿಧೆಡೆ ಗೋರಕ್ಷಕರ ಹೆಸರಿನಲ್ಲಿ ದಾಳಿಗಳು ನಡೆದ ಹಿನ್ನೆಲೆಯಲ್ಲಿ ಸಂಸತ್ತಿನ ಅಧಿವೇಶನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗುತ್ತಿವೆ. ಇಂತಹ ಸಂದರ್ಭದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಈ ಹೇಳಿಕೆ ನೀಡಿದ್ದಾರೆ.

ಲಾಲುಗೂ ಟಾಂಗ್:

ತೃಣಮೂಲ ಕಾಂಗ್ರೆಸ್ ನಾಯಕರು ಹಾಗೂ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪ್ರಕರಣಗಳನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ ಪ್ರಧಾನಿ ಮೋದಿ ಅವರು, ಭ್ರಷ್ಟಾಚಾರದಲ್ಲಿ ಭಾಗಿಯಾದವರನ್ನು ರಕ್ಷಿಸುವ ಮಾತೇ ಇಲ್ಲ. ಆ ರೀತಿ ರಕ್ಷಣೆ ಮಾಡಿದ್ದರಿಂದಲೇ ರಾಜಕೀಯ ನಾಯಕರ ಘನತೆಗೆ ಪೆಟ್ಟುಬಿದ್ದಿದೆ ಎಂದು ತಿಳಿಸಿದರು. ರಾಷ್ಟ್ರಪತಿ ಚುನಾವಣೆ ಕುರಿತೂ ಮಾತನಾಡಿದ ಅವರು, ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಒಮ್ಮತ ಮೂಡಿದ್ದರೆ ಚೆನ್ನಾಗಿರುತ್ತಿತ್ತು ಎಂದರು.