ರಾಜ್ಯಕ್ಕೆ ಹೊಸ 300 ಜನೌಷಧಿ ಕೇಂದ್ರ: ಸಚಿವ ಡಿವಿಎಸ್‌| ಹಿಂದುಳಿದ ಪ್ರದೇಶದಲ್ಲಿ ಹೆಚ್ಚು ಕೇಂದ್ರ ಆರಂಭ: ಸಚಿವ ಡಿವಿಎಸ್‌

ಬೆಂಗಳೂರು[ಜೂ.24]: ಜನಸಾಮಾನ್ಯರಿಗೆ ಅತಿ ಕಡಿಮೆ ದರದಲ್ಲಿ ಉತ್ತಮ ದರ್ಜೆಯ ಔಷಧಿಗಳು ಸಕಾಲಕ್ಕೆ ಸಿಗುವ ಹಾಗೆ ರಾಜ್ಯದಲ್ಲಿ ಶೀಘ್ರದಲ್ಲೇ ಮುನ್ನೂರಕ್ಕೂ ಹೆಚ್ಚು ಜನೌಷಧಿ ಕೇಂದ್ರ ಹಾಗೂ ಪ್ರತ್ಯೇಕ ಔಷಧ ಉಗ್ರಾಣ ತೆರೆಯಲು ನಿರ್ಧರಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ನಗರದ ಬಾಗಲಗುಂಟೆಯಲ್ಲಿ ಭಾನುವಾರ ‘ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ’ ಉದ್ಘಾಟಿಸಿ ಮಾತನಾಡಿದ ಅವರು, ಅತಿ ಹಿಂದುಳಿದ ಪ್ರದೇಶಗಳಲ್ಲಿ ಹೆಚ್ಚು ಜನೌಷಧಿ ಕೇಂದ್ರ ತೆರೆಯಲು ಉದ್ದೇಶಿಸಲಾಗಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧೆಡೆ ಮುನ್ನೂರಕ್ಕೂ ಹೆಚ್ಚು ಜನೌಷಧಿ ಕೇಂದ್ರ ತೆರೆಯಲು ಯೋಜಿಸಲಾಗಿದೆ. ಈಗಾಗಲೇ ರಾಜ್ಯದ ಹಲವೆಡೆ ಜನೌಷಧಿ ಕೇಂದ್ರ ತೆರೆದಿದ್ದು, ಸಾಕಷ್ಟುಬಡ ರೋಗಿಗಳಿಗೆ ಅನುಕೂಲವಾಗಿದೆ ಎಂದರು.

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ಮಧ್ಯಂತರ ಚುನಾವಣೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಧ್ಯಂತರ ಚುನಾವಣೆ ನಡೆದರೆ ಜನರ ಮೇಲೆ ಹೊರೆ ಹೆಚ್ಚಾಗಲಿದೆ. ಹಾಗಾಗಿ ಜನರಿಗೆ ತೊಂದರೆ ಕೊಡಲು ನಾವು ಸಿದ್ಧರಿಲ್ಲ. ಮೈತ್ರಿ ಸರ್ಕಾರ ಪತನವಾದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುತ್ತೇವೆ. ಸಮ್ಮಿಶ್ರ ಸರ್ಕಾರದಲ್ಲಿ ಇದುವರೆಗೂ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂದರು.

ಮೈತ್ರಿ ಸರ್ಕಾರದ ‘ಮೈತ್ರಿ ಪರ್ವ ಸಾಧನಾ ಪುಸ್ತಕ’ದ ಬಗ್ಗೆ ಮಾತನಾಡಿದ ಅವರು, ಇದು ಬೂಟಾಟಿಕೆಯ ಪುಸ್ತಕ. ಕುರ್ಚಿ ಉಳಿಸುವ ಬಗ್ಗೆ ಬರೆಯುವುದನ್ನು ಬಿಟ್ಟು ಬೇರೆಲ್ಲಾ ಬರೆದಿದ್ದಾರೆ ಎಂದು ವ್ಯಂಗ್ಯವಾಡಿದರು.

ಮಾಜಿ ಶಾಸಕ ಎಸ್‌.ಮುನಿರಾಜು, ಮುಖಂಡರಾದ ಉಮಾದೇವಿ, ನಾಗರಾಜು, ಲೋಕೇಶ್‌ ಸೇರಿದಂತೆ ಸ್ಥಳೀಯ ಮುಖಂಡರು, ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.