‘ನಕ್ಕಾಂವ ಗೆದ್ದಾಂವ'  ಹೌದು... ನಗುವವನು ನಿಜಕ್ಕೂ ಗೆಲ್ಲುತ್ತಾನೆ. ಅಥವಾ ಗೆಲ್ಲುವವನು ನಗುತ್ತಾನೆ.. ಇಲ್ಲ ನಗುವಿನಿಂದಲೇ ಜಗವನ್ನು ಗೆಲ್ಲುತ್ತಾನೆ. ಇಲ್ಲಿ ನಗುವೆ ಮಾನದಂಡ ಬಾಕಿಯದ್ದೆಲ್ಲ ಗೌಣ. ಗಂಗಾವತಿ ಪ್ರಾಣೇಶ್ ಇವರಿಗೆ ಬೇರೆ ಯಾವ ಅನ್ವರ್ಥಕ  ಬೇಕಿಲ್ಲ. ಗಂಗಾವತಿ ಪ್ರಾಣೇಶ್ ಅಂಥ ಹೆಸರು ಹೇಳಿದ ತಕ್ಷಣವೇ ಅಲ್ಲೊಂದು ಹಾಸ್ಯದ ಪಂಚ್ ಇರುತ್ತದೆ. ಇಂಥ ಪ್ರಾಣೇಶ್ ಅವರ ಕೈ ನಿಂದಲೇ ಅರಳಿದ ಪುಸ್ತಕ ‘ನಕ್ಕಾಂವ ಗೆದ್ದಾಂವ'. ಬಸವನಗುಡಿಯಲ್ಲಿ ಭಾನುವಾರ ಪುಸ್ತಕದ ಲೋಕಾರ್ಪಣೆ.

ಬೆಂಗಳೂರು[ಆ.12] ಸಭಾಂಗಂಣದಲ್ಲಿ ಕುಳಿತುಕೊಳ್ಳಲು ಜಾಗವಿಲ್ಲ ಅದಕ್ಕೆ ಕಾರಣ ಪ್ರಾಣೇಶ್.. ಗಂಗಾವತಿ ಪ್ರಾಣೇಶ್.. ಪ್ರಾಣೇಶ್ ವಿರಚಿತ ಪುಸ್ತಕ ಬಿಡುಗಡೆಗೆ ಸಹೃದಯರು ಒಂದೆಡೆ ಸೇರಿದ್ದರು. ಪ್ರಾಣೇಶ್ ಹಾಸ್ಯ ಪ್ರಸಂಗಳನ್ನು ಮತ್ತೆ ಸವಿಯಲು ಕಾಯುತ್ತಲೇ ಇದ್ದರು.

Add Asianetnews Kannada as a Preferred SourcegooglePreferred

ಸಾವಣ್ಣ ಪ್ರಕಾಶನದಲ್ಲಿ ಮೂಡಿಬಂದಿರುವ ‘ನಕ್ಕಾಂವ ಗೆದ್ದಾಂವ' ಪುಸ್ತಕ ಲೋಕಾರ್ಪಣೆಯಾಗಿತ್ತು. ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್, ಕನ್ನಡಪ್ರಭ ಪುರವಣಿ ಸಂಪಾದಕ ಜೋಗಿ, ನಟ ನೆನಪಿರಲಿ ಪ್ರೇಮ್ ಪ್ರಾಣೇಶರ ಪುಸ್ತಕ ಅನಾವರಣ ವೇದಿಕೆಯಲ್ಲಿದ್ದರು. "ಥಟ್ ಅಂಥ ಹೇಳಿ" ಖ್ಯಾತಿಯ ಸೋಮೇಶ್ವರ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

‘ನಕ್ಕಾಂವ ಗೆದ್ದಾಂವ'-ದಾಖಲೆಯಾಗುವಂತಹ ಲೇಖನಗಳನ್ನು ಒಳಗೊಂಡ ಪುಸ್ತಕ ಇದಲ್ಲ, ಇದನ್ನು ಕೊಂಡು ಓದಿದರೆ ನಮ್ಮ ಕನ್ನಡಿಗರು ಮಾರಾಟದಲ್ಲಾದರೂ ದಾಖಲೆ ಸ್ಥಾಪಿಸಿಕೊಡಲಿ ಎಂಬುದು ಪ್ರಾಣೇಶರ ವಿನಂತಿ. 30 ವಿಭಿನ್ನ ಅಂಕಣಗಳನ್ನು ಒಳಗೊಂಡ ಪುಸ್ತಕವೇ ‘ನಕ್ಕಾಂವ ಗೆದ್ದಾಂವ'.. ಇಲ್ಲಿ ನಗೆ ಬುಗ್ಗೆಯಿದೆ, ಜತೆಗೆ ಪರಿಸರ ಕಾಳಜಿಯಿದೆ.. ಒಮ್ಮೆಮ್ಮೆ ಕಣ್ಣಲ್ಲಿ ನೀರು ತರಿಸುವ ಭಾವನೆಗಳು ಇವೆ.

ಕನ್ನಡಿಗರನ್ನು ನೆನೆಸಿಕೊಂಡ ಪ್ರಾಣೇಶ್ ಒಂದು ಧನ್ಯವಾದ ಹೇಳುತ್ತಾ ಬರವಣಿಗೆಯ ಹಿಂದಿನ ಶಕ್ತಿ ಓದು.. ಓದು.. ಹೆಚ್ಚು ಹೆಚ್ಚು ಓದಿದರೆ ಉತ್ತಮವಾಗಿ ಬರೆಯಲು ಸಾಧ್ಯ ಎಂದು ಓದಿನ ಮಹತ್ವ ಮತ್ತೆ ಒತ್ತಿ ಹೇಳಿದರು. ಪ್ರಾಣೇಶರೊಂದಿಗಿನ ಬಾಂಧವ್ಯ ಮೆಲುಕು ಹಾಕಿದ ವಿಶ್ವೇಶ್ವರ ಭಟ್, ಪ್ರಾಣೇಶ್ ಯಾವ ಸೂಪರ್ ಸ್ಟಾರ್ ಗೂ ಕಮ್ಮಿ ಇಲ್ಲ. ಜನ ಸೇರಿದ್ದಾರೆ ಅಂದರೆ ಅಲ್ಲಿ ಪ್ರಾಣೇಶ್ ಇದ್ದಾರೆ ಎಂದರ್ಥ ಎಂದು ಬಣ್ಣಿಸಿದರು.

ಪುಸ್ತಕಗಳ ಒಳ-ಹೊರಗನ್ನು ತೆರೆದಿಟ್ಟ ಜೋಗಿ. ಯಾವ ಕಾರಣಕ್ಕೆ ಪುಸ್ತಕ ಓದಬೇಕು.. ಪ್ರಾಣೇಶ್ ಸವೆಸಿದ ಹಾದಿ ಮತ್ತು ಹಾಸ್ಯ ಲೋಕದ ಇಂದಿನ ನೈಜತೆಗಳ ಬಗ್ಗೆ ಮಾತನಾಡಿದರು. ಬರೆಯುವುದೇ ಗೊತ್ತಿಲ್ಲ ಎಂದು ಕೊಂಡಿದ್ದ ನನ್ನ ಬಳಿಯೂ ಬರೆಯಲು ಸಾಧ್ಯವಿದೆ ಅಂಥ ನಿರೂಪಿಸಿದ್ದು ಪ್ರಾಣೇಶ್ ಎಂದು ಪ್ರೇಮ್ ನೆನಪು ಮಾಡಿಕೊಂಡರು.

ಸಹೃದಯರ ಒಕ್ಕೂಟಕ್ಕೆ ಒಂದು ಸಂದೇಶ, ಒಂದಿಷ್ಟು ನಗು, ಒಂದಿಷ್ಟು ಚಿಂತನೆ, ಒಂದಿಷ್ಟು ಕನ್ನಡ ಅಭಿಮಾನ ಹಂಚುವುದಕ್ಕೆ ಭಾನುವಾರದ ಬೆಳಗಿನ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮ ವೇದಿಕೆಯಾಯಿತು.