ಹಲವು ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಬೆಂಬಲ ಬೆಲೆ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ನೇರವಾಗಿ ರೈತರಿಗೆ ತಲುಪಿಸುವ ಉದ್ದೇಶದಿಂದ ಈ ತಿಂಗಳ ಅಂತ್ಯ ಅಥವಾ ಬರುವ ಆಗಸ್ಟ್ ಮೊದಲ ವಾರದಲ್ಲಿ ರಾಜ್ಯಕ್ಕೆ ಆಗಮಿಸಿ ಭಾಷಣ ಮಾಡಲಿದ್ದಾರೆ. 

ಬೆಂಗಳೂರು : ಹಲವು ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಬೆಂಬಲ ಬೆಲೆ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ನೇರವಾಗಿ ರೈತರಿಗೆ ತಲುಪಿಸುವ ಉದ್ದೇಶದಿಂದ ಈ ತಿಂಗಳ ಅಂತ್ಯ ಅಥವಾ ಬರುವ ಆಗಸ್ಟ್ ಮೊದಲ ವಾರದಲ್ಲಿ ರಾಜ್ಯಕ್ಕೆ ಆಗಮಿಸಿ ಭಾಷಣ ಮಾಡಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಬಲ ಬೆಲೆ ಹೆಚ್ಚಿಸಿರುವ ಸಂಬಂಧ ದೇಶಾದ್ಯಂತ ಸುಮಾರು 20 ಪ್ರಮುಖ ರಾಜ್ಯಗಳಿಗೆ ತೆರಳಿ ರೈತರ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಮೋದಿ ಅವರು ಅದರನ್ವಯ ಕರ್ನಾಟಕಕ್ಕೂ ಭೇಟಿ ನೀಡುವುದು ಖಚಿತವಾಗಿದೆ. ಉತ್ತರ ಕರ್ನಾಟಕದ ಅದರಲ್ಲೂ ಮುಂಬೈ ಕರ್ನಾಟಕದ ಬೆಳಗಾವಿ ಅಥವಾ ಬೇರೊಂದು ಜಿಲ್ಲೆಯಲ್ಲಿ ರೈತ ಸಮಾವೇಶ ಆಯೋಜಿಸಲು ರಾಜ್ಯ ಬಿಜೆಪಿಯ ರೈತ ಮೋರ್ಚಾ ಸಿದ್ಧತೆ ಆರಂಭಿಸಿದೆ.

ಸುಮಾರು ಮೂರ್ನಾಲ್ಕು ಲಕ್ಷ ರೈತರನ್ನು ಸೇರಿಸುವ ಉದ್ದೇಶವನ್ನೂ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿವೆ. ರೈತ ಮೋರ್ಚಾದ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಲಕ್ಷ್ಮಣ ಸವದಿ ಅವರು ಇತ್ತೀಚೆಗಷ್ಟೇ ನೇಮಕ ಗೊಂಡಿರುವುದರಿಂದ ತಮ್ಮ ಬೆಳಗಾವಿ ಜಿಲ್ಲೆಯಲ್ಲಿ ಸಮಾವೇಶ ನಡೆಯಲಿ ಎಂಬ ಭಾವನೆ ಹೊಂದಿದ್ದಾರೆ. 

ಈ ತಿಂಗಳ 28ರಂದು ಜಿಲ್ಲೆಯ ಚಿಕ್ಕೋಡಿಯಲ್ಲಿ ಸಮಾವೇಶ ಆಯೋಜಿಸುವ ಸಂಬಂಧ ಪ್ರಧಾನಿ ಕಚೇರಿಗೂ ಸಂಪರ್ಕ ಮಾಡಿದ್ದಾರೆ. ಆದರೆ, ಪ್ರಧಾನಿ ಮೋದಿ ಅವರು ಈ ಹಿಂದೆ ಬೆಳಗಾವಿ ಜಿಲ್ಲೆಗೆ ಹಲವು ಬಾರಿ ಆಗಮಿಸಿರುವುದರಿಂದ ಹಾವೇರಿ, ಬಾಗಲಕೋಟೆ ಸೇರಿದಂತೆ ಬೇರೊಂದು ಜಿಲ್ಲೆಯಲ್ಲಿ ಸಮಾವೇಶ ನಡೆಸುವುದು ಉತ್ತಮ ಎಂಬ ಅಭಿಪ್ರಾಯವೂ ಬಂದಿದೆ. 

ಹೀಗಾಗಿ, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇನ್ನೆರಡು ದಿನಗಳಲ್ಲಿ ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಸ್ಥಳ ಮತ್ತು ದಿನಾಂಕದ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.