ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿಗೆ ಸಂಕಷ್ಟ | ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್ | 

ನವದೆಹಲಿ (ಸೆ. 11): 2011 -12 ನೇ ಸಾಲಿನ ತೆರಿಗೆ ವಿವರ ಸಲ್ಲಿಕೆ ಬಗ್ಗೆ ಮರುಪರಿಶೀಲನೆ ನಡೆಸಬಾರದು ಎಂದು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಆಸ್ಕರ್ ಫರ್ನಾಂಡಿಸ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

Add Asianetnews Kannada as a Preferred SourcegooglePreferred

ಇದರಿಂದಾಗಿ ನಾಯಕರಿಗೆ ತೆರಿಗೆ ಇಲಾಖೆಯಿಂದ ಸಂಕಷ್ಟ ಎದುರಾಗುವ ಸಂಭವವಿದೆ. 2011 -12 ನೇ ಸಾಲಿನ ಆದಾಯಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ರಾಹುಲ್ ಗಾಂಧಿ ಬಚ್ಚಿಟ್ಟಿದ್ದಾರೆ ಎಂಬ ಕಾರಣ ನೀಡಿ ಮರುಪರಿಶೀಲನೆ ನಡೆಸಲು ನಿರ್ಧರಿಸಿದ ಆದಾಯ ತೆರಿಗೆ ಇಲಾಖೆ ಕ್ರಮ ಪ್ರಶ್ನಿಸಿ ಮೂವರೂ ನಾಯಕರು ಹೈಕೋರ್ಟ್ ಮೊರೆ ಹೋಗಿದ್ದರು.

ಆ.16 ರಂದು ವಿಚಾರಣೆ ಪೂರ್ಣಗೊಳಿಸಿದ್ದ ಕೋರ್ಟ್ ಈಗ ತೀರ್ಪು ಪ್ರಕಟಿಸಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಖಾಸಗಿ ಅರ್ಜಿಯ ತನಿಖೆ ವೇಳೆ ಕಾಂಗ್ರೆಸ್ ನಾಯಕರು ಆದಾಯ ತೆರಿಗೆ ಪ್ರಕರಣಗಳಲ್ಲಿ ಸಿಲುಕುವಂತಾಗಿತ್ತು.

ಕೇವಲ 50 ಲಕ್ಷ ರು. ವೆಚ್ಚದಲ್ಲಿ ಯಂಗ್ ಇಂಡಿಯಾ ಎಂಬ ಕಂಪನಿಯನ್ನು ಸ್ಥಾಪಿಸಿ ಸೋನಿಯಾ, ರಾಹುಲ್ ಹಾಗೂ ಇತರರು ಅಸೋಸಿಯೇಟೆಡ್ ಜರ್ನಲ್ಸ್ ಕಂಪನಿಯ 90.25 ಕೋಟಿ ರು. ಆಸ್ತಿ ಹಕ್ಕು ಗಳಿಸಿದ್ದಾರೆ. ಆ ಕಂಪನಿಯ ಎಲ್ಲ ಷೇರುಗಳನ್ನು ಖರೀದಿಸಿದ್ದಾರೆ ಎಂಬುದು ಸ್ವಾಮಿ ಆರೋಪವಾಗಿತ್ತು.

ತನಿಖೆಯ ಆಳಕ್ಕೆ ಇಳಿದಾಗ 2011 -12 ನೇ ಸಾಲಿನಲ್ಲಿ ರಾಹುಲ್ ಗಾಂಧಿ ಅವರು 68 ಲಕ್ಷ ರು. ಆದಾಯ ತೋರಿಸಿದ್ದರು. ಯಂಗ್ ಇಂಡಿಯಾದಲ್ಲಿರುವ ಷೇರುಗಳನ್ನೂ ಲೆಕ್ಕಕ್ಕೆ ಹಿಡಿದರೆ ರಾಹುಲ್ ಆದಾಯ 154 ಕೋಟಿ ರು.ಗೆ ಏರುತ್ತದೆ ಎಂದು ತೆರಿಗೆ ಇಲಾಖೆ ಈ ಹಿಂದೆ ಹೇಳಿತ್ತು.