ಕರಾವಳಿ, ಮಲೆನಾಡಲ್ಲಿ ಮತ್ತೆ ಭಾರಿ ಮಳೆ?
ಬಂಗಾಳ ಕೊಲ್ಲಿಯಲ್ಲಿ ದಟ್ಟಮೋಡ ಮೇಳೈಸುತ್ತಿದ್ದು, ಮತ್ತೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಮೂಡಿದೆ. ಈ ಹಿನ್ನೆಲೆಯಲ್ಲಿ ಆ.27ರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ದಟ್ಟಮೋಡ ಮೇಳೈಸುತ್ತಿದ್ದು, ಮತ್ತೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಮೂಡಿದೆ. ಈ ಹಿನ್ನೆಲೆಯಲ್ಲಿ ಆ.27ರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಸಿದೆ.
ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆ, ಶುಕ್ರವಾರ ರಾಜ್ಯದ ಹಲವು ಭಾಗಗಳಲ್ಲಿ ಸುರಿಯಿತು. ಬೆಂಗಳೂರು, ಕರಾವಳಿ, ಘಟ್ಟಪ್ರದೇಶ ಸೇರಿದಂತೆ ಹಲವೆಡೆ ಹಗುರ ಮತ್ತು ಸಾಧಾರಣ ಮಳೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿರುವುದರಿಂದ ಮುಂದಿನ ಎರಡು ಮೂರು ದಿನಗಳಲ್ಲಿ ರಾಜ್ಯದ ಹಲವೆಡೆ ಸಾಧಾರಣ ಮಳೆ ಹಾಗೂ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಜೋರು ಮಳೆಯಾಗಲಿದೆ ಎಂದು ಕೇಂದ್ರದ ನಿರ್ದೇಶಕ ಡಾ.ಜಿ.ಶ್ರೀನಿವಾಸ ರೆಡ್ಡಿ ತಿಳಿಸಿದರು.
ಕಳೆದ ವಾರ ರಾಜ್ಯದಲ್ಲಿ ಸುರಿದ ರಕ್ಕಸ ಮಳೆಗೆ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿ ಹಲವು ಭಾಗಗಳಲ್ಲಿ ಜನರ ಆಸ್ತಿಪಾಸ್ತಿಗೆ ಹಾನಿಯಾಗಿದ್ದು, ಹಲವು ಸಾವು-ನೋವುಗಳು ಸಂಭವಿಸಿವೆ. ಇಂದಿಗೂ ಪರಿಹಾರ ಕಾರ್ಯಗಳು ಮುಂದುವರಿದಿವೆ. ಮತ್ತೊಮ್ಮೆ ಭಾರಿ ಮಳೆಯಾದರೆ ಕೊಡಗಿನ ಜನಜೀವನ ಅಸ್ತವ್ಯಸ್ತವಾಗಿ ಪರಿಹಾರ ಕಾರ್ಯಗಳ ಮುಂದುವರಿಕೆಗೆ ತೊಡಕಾಗುವ ಸಾಧ್ಯತೆಯಿದೆ.