ನೂತನ ಸಮ್ಮಿಶ್ರ ಸರ್ಕಾರದ ಬಜೆಟ್ನ ಪೂರ್ವ ತಯಾರಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜನತಾ ದರ್ಶನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಪೂರ್ವ ತಯಾರಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಬೆಂಗಳೂರು : ನೂತನ ಸಮ್ಮಿಶ್ರ ಸರ್ಕಾರದ ಬಜೆಟ್ನ ಪೂರ್ವ ತಯಾರಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜನತಾ ದರ್ಶನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಪೂರ್ವ ತಯಾರಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಆಯವ್ಯಯ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಬೇಕಾಗಿರುವ ಕಾರಣ ಬಜೆಟ್ ಅಧಿವೇಶನ ಮುಕ್ತಾಯಗೊಳ್ಳುವವರೆಗೆ ಜನತಾ ದರ್ಶನ ಮತ್ತು ಸಾರ್ವಜನಿಕರ ಭೇಟಿಯನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಸೋಮವಾರ ಪ್ರಕಟಣೆ ನೀಡಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವೇಳೆ ನಿತ್ಯ ಜನತಾದರ್ಶನ ನಡೆಸುವುದಾಗಿ ಹೇಳಿದ್ದರು. ಅದರಂತೆ ಬೆಂಗಳೂರಿನಲ್ಲಿದ್ದಾಗ ಕುಮಾರಸ್ವಾಮಿ ಅವರು ಜನತಾದರ್ಶನ ನಡೆಸುತ್ತಿದ್ದರು.
ಅಲ್ಲದೆ, ಇತ್ತೀಚೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಲವು ಮಂದಿ ಜನತಾ ದರ್ಶನಕ್ಕೆ ಆಗಮಿಸುತ್ತಾರೆ. ಪ್ರತಿ ಜಿಲ್ಲೆಯಲ್ಲೂ ಜನತಾದರ್ಶನ ನಡೆಸುವ ಬಗ್ಗೆ ಮುಖ್ಯಮಂತ್ರಿ ಇಂಗಿತ ವ್ಯಕ್ತಪಡಿಸಿದ್ದರು. ಆದರೆ, ಜನತಾ ದರ್ಶನಕ್ಕಾಗಿಯೇ ಹೆಚ್ಚಿನ ಸಮಯ ವ್ಯಯವಾಗುತ್ತಿದ್ದುದರಿಂದ ಸದ್ಯಕ್ಕೆ ಮುಂದೂಡಲು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.
