ಇನ್ನಾವ ಬಿಜೆಪಿ ಸಂಸದರಿಗೂ ಟಿಕೆಟ್ ಇಲ್ಲ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಇಬ್ಬರು ಸಂಸದರಿಗೆ ಮಾತ್ರ ಟಿಕೆಟ್ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರು : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಇಬ್ಬರು ಸಂಸದರಿಗೆ ಮಾತ್ರ ಟಿಕೆಟ್ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಮೊದಲ ಪಟ್ಟಿಯಲ್ಲಿ ಶಿವಮೊಗ್ಗ ಸಂಸದರಾಗಿರುವ ಯಡಿಯೂರಪ್ಪ ಅವರಿಗೆ ಶಿಕಾರಿಪುರದಿಂದ ಮತ್ತು ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಅವರಿಗೆ ಮೊಳಕಾಲ್ಮುರು ಕ್ಷೇತ್ರದಿಂದ ಟಿಕೆಟ್ ಘೋಷಿಸಲಾಗಿದೆ. ಈ ನಡುವ ಕೊಪ್ಪಳ ಸಂಸದ ಕರಡಿ ಸಂಗಣ್ಣ ಮತ್ತಿತರರೂ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸಂಸದನಾಗಿರುವ ನಾನು ಮತ್ತು ಶ್ರೀರಾಮುಲು ಅವರಿಗೆ ಮಾತ್ರ ಟಿಕೆಟ್ ನೀಡುವ ಬಗ್ಗೆ ಹಿಂದೆ ನಿರ್ಧಾರವಾಗಿತ್ತು. ಇನ್ನುಳಿದ ಯಾವುದೇ ಸಂಸದರಿಗೂ ಟಿಕೆಟ್ ನೀಡುವ ಪ್ರಸ್ತಾಪವಿಲ್ಲ ಎಂದು ಹೇಳಿದರು.