ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದರೆ ಗೆಲ್ಲುವುದು ಕಷ್ಟ ಎಂಬ ಕಾರಣಕ್ಕಾಗಿ ಒಪ್ಪುತ್ತಿಲ್ಲ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಕಡೆ ಮುಖ ಮಾಡುವ ಮೊದಲೂ ಚೆಲುವರಾಯಸ್ವಾಮಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ್ದರು.

ಬೆಂಗಳೂರು(ಡಿ.08): ಜೆಡಿಎಸ್‌ನ ಬಂಡಾಯ ಶಾಸಕ ಚೆಲುವರಾಯಸ್ವಾಮಿ ಅವರನ್ನು ಬಿಜೆಪಿಗೆ ಕರೆತರುವ ಪ್ರಯತ್ನ ಮತ್ತೊಮ್ಮೆ ನಡೆದಿದೆ ಎಂಬ ಸುದ್ದಿ ಹೊರಬಿದ್ದಿದೆ.

Add Asianetnews Kannada as a Preferred SourcegooglePreferred

ರಾಮನಗರ ಜಿಲ್ಲೆ ಚನ್ನಪಟ್ಟಣದ ಶಾಸಕ ಸಿ.ಪಿ.ಯೋಗೇಶ್ವರ್ ಈ ಪ್ರಯತ್ನಕ್ಕೆ ಕೈಹಾಕಿದ್ದು, ಚೆಲುವರಾಯಸ್ವಾಮಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಟಿಕೆಟ್ ನೀಡಿದರೆ ಬಿಜೆಪಿಗೆ ವಲಸೆ ಬರುವುದಾಗಿ ಷರತ್ತು ವಿಧಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ಮಾಹಿತಿಯನ್ನು ಬಿಜೆಪಿ ನಾಯಕರು ಖಚಿತಪಡಿಸುತ್ತಿಲ್ಲ. ಯೋಗೇಶ್ವರ್ ಅವರಿಗೆ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ರಾಜರಾಜೇಶ್ವರಿನಗರದಿಂದ ಟಿಕೆಟ್ ನೀಡುವುದು ಸಾಧ್ಯವಿಲ್ಲ.

ಮಂಡ್ಯ ಜಿಲ್ಲೆಯ ಯಾವುದೇ ಕ್ಷೇತ್ರದಿಂದಲಾದರೂ ಸ್ಪರ್ಧಿಸಿ ಎಂಬ ಸಲಹೆಯನ್ನು ಯೋಗೇಶ್ವರ್ ಚೆಲುವರಾಯಸ್ವಾಮಿ ಅವರಿಗೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದರೆ ಗೆಲ್ಲುವುದು ಕಷ್ಟ ಎಂಬ ಕಾರಣಕ್ಕಾಗಿ ಒಪ್ಪುತ್ತಿಲ್ಲ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಕಡೆ ಮುಖ ಮಾಡುವ ಮೊದಲೂ ಚೆಲುವರಾಯಸ್ವಾಮಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ್ದರು.

ಆಗಲೂ ಅವರು ರಾಜರಾಜೇಶ್ವರಿ ನಗರ ಕ್ಷೇತ್ರದಿಂದಲೇ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದರು. ಆದರೆ, ಟಿಕೆಟ್ ಭರವಸೆ ಸಿಗದೇ ಇದ್ದುದರಿಂದ ಕಾಂಗ್ರೆಸ್ ಸೇರುವ ನಿರ್ಧಾರ ಕೈಗೊಂಡರು. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ ಚೆಲುವರಾಯಸ್ವಾಮಿ ಹಾಲಿ ಪ್ರತಿನಿಧಿಸುತ್ತಿರುವ ನಾಗಮಂಗಲಕ್ಕೆ ಬಂದು ಚೆಲುವರಾಯಸ್ವಾಮಿಯೇ ಕಾಂಗ್ರೆಸ್‌ನಿಂದ ಕಣಕ್ಕಿಳಿಯಲಿದ್ದಾರೆ ಎಂದಿದ್ದರು.