ಇಂಗ್ಲಿಷ್ ಮಾಧ್ಯಮ ವಿರುದ್ಧ ಭಾರಿ ಚಳವಳಿ!
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸುಮಾರು ಒಂದು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಇದೀಗ ಕನ್ನಡ ಸಾರಸ್ವತ ಲೋಕದಿಂದ ಭಾರಿ ಪ್ರತಿರೋಧ ಎದುರಾಗಿದೆ.
ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸುಮಾರು ಒಂದು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಇದೀಗ ಕನ್ನಡ ಸಾರಸ್ವತ ಲೋಕದಿಂದ ಭಾರಿ ಪ್ರತಿರೋಧ ಎದುರಾಗಿದೆ. ಸರ್ಕಾರದ ಈ ನೀತಿ ವಿರುದ್ಧ ಸಭೆ ಸೇರಿದ ಅಗ್ರಗಣ್ಯ ಸಾಹಿತಿಗಳು ಹಾಗೂ ಹೋರಾಟಗಾರರು, ಈ ನೀತಿ ಹಿಂಪಡೆಯದಿದ್ದರೆ ಗೋಕಾಕ್ ಮಾದರಿ ಚಳವಳಿ ನಡೆಸುವ ಎಚ್ಚರಿಕೆಯನ್ನು ರಾಜ್ಯ ಸರ್ಕಾರಕ್ಕೆ ನೀಡಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ ನೇತೃತ್ವದಲ್ಲಿ ಬುಧವಾರ ಸಭೆಯೊಂದನ್ನು ನಡೆಸಿದ ನಾಡಿನ ಅಗ್ರಗಣ್ಯ ಸಾಹಿತಿಗಳಾದ ಜ್ಞಾನಪೀಠ ಪುರಸ್ಕೃತ ಡಾ. ಚಂದ್ರಶೇಖರ್ ಕಂಬಾರ, ಎಸ್.ಎಲ್.ಭೈರಪ್ಪ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ, ಸಾಹಿತಿಗಳಾದ ಪ್ರೊ.ಚಂದ್ರಶೇಖರ ಪಾಟೀಲ, ಡಾ.ಸಿದ್ದಲಿಂಗಯ್ಯ ಮೊದಲಾದವರು, ನಿಲುವು ಬದಲಿಸುವಂತೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಮಾಡಲು ನಿರ್ಧರಿಸಿದರು.
ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್ ಈ ಮನವಿಗೆ ಸರ್ಕಾರ ಸ್ಪಂದಿಸದಿದ್ದರೆ ಹೋರಾಟದ ಮಾರ್ಗವನ್ನು ಅನುಸರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಆರಂಭಿಸುವ ಸರ್ಕಾರದ ನಿಲುವಿಗೆ ನಮ್ಮ ವಿರೋಧವಿದೆ. ಈ ಕುರಿತು ಸಾಹಿತಿಗಳು ಇಂದು ಸಭೆ ನಡೆಸಿದ್ದು, ಮೂರು ನಿರ್ಣಯಗಳನ್ನು ಕೈಗೊಂಡಿದ್ದೇವೆ. ಯಾವುದೇ ಕಾರಣಕ್ಕೂ ಸರ್ಕಾರ ಪ್ರಾಥಮಿಕ ಹಂತದಿಂದ ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭ ಮಾಡಬಾರದು. ಕನ್ನಡ ಮಾಧ್ಯಮದಲ್ಲೇ ಇಂಗ್ಲಿಷ್ ಅನ್ನು ಒಂದು ಭಾಷೆಯನ್ನಾಗಿ ಕಲಿಸಬಹುದು. ಅಂತೆಯೇ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲೂ ಕೂಡ ಕನ್ನಡವನ್ನು ಒಂದು ವಿಷಯವಾಗಿ ಕಲಿಸಬೇಕು. ಹಿಂದಿನ ಸರ್ಕಾರ ನೀಡಿದ್ದ ಭರವಸೆಯಂತೆ ಕನ್ನಡ ಶಾಲೆಗಳನ್ನು ಸಬಲೀಕರಣಗೊಳಿಸಲು ಮೈತ್ರಿ ಸರ್ಕಾರ ಬದ್ಧವಾಗಿರಬೇಕು ಎಂಬ ನಿರ್ಣಯ ಕೈಗೊಂಡಿದ್ದೇವೆ. ಈ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ನಿಯೋಗದೊಂದಿಗೆ ಭೇಟಿಯಾಗಿ ಪ್ರಸ್ತುತ ಕೈಗೊಂಡ ನಿರ್ಣಯಗಳ ಜಾರಿಗೆ ಆಗ್ರಹಿಸಬೇಕೆಂದು ತೀರ್ಮಾನಿಸಿರುವುದಾಗಿ ಹೇಳಿದರು.
ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ್ ಪಾಟೀಲ್ ಮಾತನಾಡಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡೇ ಮುಂದಿನ ಶೈಕ್ಷಣಿಕ ವರ್ಷದಿಂದ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸುವ ಮಾತು ಹೇಳಿದ್ದಾರೆ. ಬಹುಶಃ ಬೆಳಗಾವಿ ಅಧಿವೇಶನದಲ್ಲೇ ಅದನ್ನು ಕಾಯ್ದೆಯಾಗಿ ಜಾರಿ ತಂದರೂ ಆಶ್ಚರ್ಯವಿಲ್ಲ. ಸರ್ಕಾರದ ಈ ನಿರ್ಧಾರಕ್ಕೆ ಹೋರಾಟ ಪ್ರಾರಂಭ ಮಾಡುವುದು ಅನಿವಾರ್ಯ. ಅದಕ್ಕೆ ಮುಖ್ಯಮಂತ್ರಿಗಳೇ ಕಾರಣರಾಗುತ್ತಾರೆ ಎಂದು ಎಚ್ಚರಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಮಾತನಾಡಿ, ನಾಡಿನಲ್ಲಿ ಮಾತೃಭಾಷೆಗೆ ಮೊದಲ ಆದ್ಯತೆ. ಪ್ರಾಥಮಿಕ ಶಾಲೆಗಳಿಂದಲೇ ನಮ್ಮ ಮಕ್ಕಳಿಗೆ ಮಾತೃಭಾಷೆ ಕಲಿಸದಿದ್ದರೆ ಕನ್ನಡ ಉಳಿಯುವುದು ಹೇಗೆ ಸಾಧ್ಯ? ಸರ್ಕಾರ ಕೂಡಲೇ ತನ್ನ ನಿಲುವು ಬದಲಿಸಬೇಕು. ಇಲ್ಲದಿದ್ದರೆ ನಾಡು, ನುಡಿಗಾಗಿ ಈ ಹಿಂದೆ ನಡೆದ ಗೋಕಾಕ್ ಚಳವಳಿ ಮಾದರಿಯಲ್ಲೇ ಹೋರಾಟ ನಡೆಸಬೇಕಾಗುತ್ತದೆ ಎಂದು ಹೇಳಿದರು.
ಹಿರಿಯ ಕವಿ ಸಿದ್ದಲಿಂಗಯ್ಯ ಮಾತನಾಡಿ, ಸರ್ಕಾರ ಶಿಕ್ಷಣ ಮಾಧ್ಯಮದ ಕುರಿತು ಅನವಶ್ಯಕ ಗೊಂದಲ ಸೃಷ್ಟಿಸುತ್ತಿದೆ. ಶಿಕ್ಷಣ ಮಾಧ್ಯಮವನ್ನೇ ಇಂಗ್ಲಿಷ್ ಮಾಡುತ್ತೇನೆ ಎನ್ನುತ್ತಿರುವ ಸರ್ಕಾರಕ್ಕೆ ಶೈಕ್ಷಣಿಕ ಪರಿಜ್ಞಾನ ಇಲ್ಲ. ಈ ನಿಲುವಿನಿಂದ ಸರ್ಕಾರ ಹಿಂದೆ ಸರಿಯದಿದ್ದರೆ ದೊಡ್ಡ ಹೋರಾಟ ಎದುರಿಸಬೇಕಾಗುತ್ತದೆ ಎಂದರು.
ಹಿರಿಯ ಚಿಂತಕ ಕಾಳೇಗೌಡ ನಾಗವಾರ, ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್, ಕಸಾಪ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಪ್ರಾದೇಶಿಕ ಪಕ್ಷಗಳು ತಮಗೆ ಅನುಕೂಲವಾದಾಗ ಅಥವಾ ಅನುಕೂಲವಾಗಬೇಕು ಎನ್ನುವಾಗ ಸ್ಥಳೀಯ ಸಮಸ್ಯೆ, ಆರ್ಥಿಕತೆ, ಸಂಸ್ಕೃತಿ ಇದನ್ನೆಲ್ಲಾ ಬೆಳೆಸಲು ಪ್ರಾದೇಶಿಕ ಪಕ್ಷಗಳೇ ಮುಖ್ಯ, ರಾಷ್ಟ್ರೀಯ ಪಕ್ಷಗಳ ಕೈಯಿಂದ ಇದೆಲ್ಲಾ ಸಾಧ್ಯವಿಲ್ಲ ಎಂದು ಭಾಷಣ ಮಾಡುತ್ತವೆ. ಈ ಮೂಲಕ ತಮ್ಮ ಪಕ್ಷವನ್ನು ಸಮರ್ಥನೆ ಮಾಡಿಕೊಳ್ಳುತ್ತವೆ. ಈಗ ಇಂತಹ ಪರಿಸ್ಥಿತಿ ಬಂದಾಗ ಸ್ಥಳೀಯ ಆದ್ಯತೆಯನ್ನು ಮರೆತೇಬಿಡುತ್ತಾರೆ. ಮಾತೃಭಾಷೆ ಕಲಿಕೆ ವಿಷಯದಲ್ಲಿ ಸರ್ಕಾರ ತಪ್ಪು ಹೆಜ್ಜೆ ಇಟ್ಟಿದೆ. ಅದನ್ನು ತಿದ್ದಿಕೊಳ್ಳುವ ಅವಶ್ಯಕತೆ ಇದೆ. ಸರ್ಕಾರ ತನ್ನ ತಪ್ಪು ಸರಿಪಡಿಸಿಕೊಳ್ಳದಿದ್ದರೆ ಹೋರಾಟಗಾರರು ಕೈಗೊಳ್ಳುವ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ.
- ಎಸ್.ಎಲ್.ಭೈರಪ್ಪ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ