ವಿಜಯಾ ಬ್ಯಾಂಕ್‌ ವಿಲೀನ ಪ್ರಕ್ರಿಯೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಬ್ಯಾಂಕ್ ಹೆಸರು ಹಾಗೂ ಬ್ರಾಂಡ್‌ನ್ನು ಉಳಿಸಿಕೊಳ್ಳಬೇಕು. ತಪ್ಪಿದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ಹೇಳಿದ್ದಾರೆ.

ಮಂಗಳೂರು: ಮಂಗಳೂರಿನಲ್ಲಿ ಜನ್ಮತಳೆದ ವಿಜಯಾ ಬ್ಯಾಂಕ್‌ನ್ನು ಇತರೆ ಬ್ಯಾಂಕ್‌ಗಳ ಜೊತೆ ವಿಲೀನಗೊಳಿಸಬಾರದು. ಒಂದು ವೇಳೆ ವಿಲೀನಗೊಳಿಸುವುದಿದ್ದರೆ, ವಿಜಯಾ ಬ್ಯಾಂಕ್‌ನ ಹೆಸರು ಹಾಗೂ ಬ್ರಾಂಡ್‌ನ್ನು ಉಳಿಸಿಕೊಳ್ಳಬೇಕು. ತಪ್ಪಿದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್‌ ಆಫ್‌ ಬರೋಡಾ ಹಾಗೂ ದೇನಾ ಬ್ಯಾಂಕ್‌ ಜೊತೆಗೆ ವಿಜಯಾ ಬ್ಯಾಂಕ್‌ನ್ನು ವಿಲೀನಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಹಣಕಾಸು ಇಲಾಖೆ ಮುಂದಿಟ್ಟಿದೆ. ಈ ಬಗ್ಗೆ ಪ್ರಕ್ರಿಯೆಯನ್ನೂ ಆರಂಭಿಸಿದೆ. ಬ್ಯಾಂಕ್‌ನವರೂ ಹೋರಾಟಕ್ಕೆ ನಿರ್ಧರಿಸಿದ್ದಾರೆ. ಮಂಗಳೂರಿನಲ್ಲಿ 1931ರಲ್ಲಿ ಜನ್ಮತಳೆದ ಈ ಬ್ಯಾಂಕ್‌ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಶಾಖೆಗಳನ್ನು ಹೊಂದಿದೆ. ಜನಸಾಮಾನ್ಯರ ಬ್ಯಾಂಕ್‌ ಆಗಿ ಹೆಗ್ಗಳಿಗೆ ಪಡೆದಿದೆ ಎಂದರು.

ಇಂಡಿಯನ್‌ ಬ್ಯಾಂಕ್‌ ಹೊರತುಪಡಿಸಿದರೆ, ಲಾಭದಲ್ಲಿರುವುದು ವಿಜಯಾ ಬ್ಯಾಂಕ್‌. ಕಳೆದ ಆರ್ಥಿಕ ವರ್ಷದಲ್ಲಿ ವಿಜಯಾ ಬ್ಯಾಂಕ್‌ 2129 ಶಾಖೆಗಳನ್ನು ಹೊಂದಿದ್ದು, ರಾಜ್ಯದಲ್ಲಿ 583 ಶಾಖೆಗಳಿವೆ. ಬ್ಯಾಂಕ್‌ನ ಆಡಳಿತ ಮಂಡಳಿ ಕೂಡ ವಿಲೀನ ವಿಚಾರ ಪ್ರಸ್ತಾಪಿಸಿಲ್ಲ. ಕಾರ್ಪೊರೇಟ್‌ ರಂಗಕ್ಕೆ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ವಿಲೀನ ಧೋರಣೆಯನ್ನು ತಳೆದಿದೆ. ವಿಲೀನಗೊಳಿಸುವುದನ್ನು ವಿರೋಧಿಸಿ ಶೀಘ್ರವೇ ಕೇಂದ್ರಕ್ಕೆ ನಿಯೋಗ ತೆರಳಿ ಹಣಕಾಸು ಸಚಿವರನ್ನು ಭೇಟಿ ಮಾಡುವುದಾಗಿ ತಿಳಿಸಿದರು.