ನೊಟು ನಿಷೇಧ: ಜೆಪಿಸಿ ತನಿಖೆಗೆ ಪ್ರತಿಪಕ್ಷಗಳ ಒತ್ತಾಯ; ಕಲಾಪ ಮುಂದೂಡಿಕೆ
ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಟಿಎಂಸಿ ಹಾಗೂ ಕಾಂಗ್ರೆಸ್ ನಾಯಕರು ನೋಟ್ ನಿಷೇಧ ಕುರಿತಂತೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಜತೆಗೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲು ಆರಂಭಿಸಿದ್ದಾರೆ.
ನವದೆಹಲಿ (ನ.28): ಕೇಂದ್ರ ಸರ್ಕಾರದ ನೋಟು ನಿಷೇಧ ಗದ್ದಲಕ್ಕೆ ಇಂದು ಕೂಡಾ ಸಂಸತ್ತಿನ ಕಲಾಪಗಳು ಬಲಿಯಾಗಿವೆ.
ನೊಟು ನಿಷೇಧಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಖುದ್ದು ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಪರಿಣಾಮವಾಗಿ ಕಲಾಪಗಳನ್ನು ನಾಳೆಗೆ ಮುಂದೂಡಲಾಗಿದೆ.
ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಟಿಎಂಸಿ ಹಾಗೂ ಕಾಂಗ್ರೆಸ್ ನಾಯಕರು ನೋಟ್ ನಿಷೇಧ ಕುರಿತಂತೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಜತೆಗೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲು ಆರಂಭಿಸಿದ್ದಾರೆ.
ಈ ವೇಳೆ ಸ್ಪೀಕರ್ ಸದಸ್ಯರನ್ನು ಶಾಂತಿವಾಗಿಸಲು ಯತ್ನಿಸಿದರಾದರೂ, ಸಂಸದರು ಶಾಂತವಾಗದ ಹಿನ್ನಲೆಯಲ್ಲಿ ಸ್ಪೀಕರ್ ಕಲಾಪವನ್ನು ನಾಳೆ ಬೆಳಗ್ಗೆ 11 ಗಂಟೆಯವರೆಗೆ ಮುಂದೂಡಿದ್ದಾರೆ. ರಾಜ್ಯಸಭಾ ಕಲಾಪದಲ್ಲೂ ಸಹ ಇದೇ ಸ್ಥಿತಿ ಮುಂದುವರೆದಿದೆ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಉತ್ತರಿಸಬೇಕು ಹಾಗೂ ಜಂಟಿ ಸಂಸದೀಯ ಸಮಿತಿಯಿಂದ (ಜೆಪಿಸಿ) ತನಿಖೆಯಾಗಬೇಕು ಎಂದು ಕಾಂಗ್ರೆಸ್, ಟಿಎಂಪಿ, ಎಎಪಿ ಹಾಗೂ ಸಿಪಿಎಂ ಸದಸ್ಯರು ಒತ್ತಾಯಿಸಿವೆ.
ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಂ ನಬಿ ಅಜಾದ್ ಮಾತನಾಡಿ ಸರ್ಕಾರದ ನಿರ್ಧಾರದ ವಿರುದ್ಧ ವಾಗ್ಧಾಳಿ ನಡೆಸಿದರು. ನಂತರ ಪ್ರತಿಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿ ಧರಣಿ ಮುಂದುವರಿಸಿದರು.