ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ಸ್ವಾಗತಿಸಿದ ಪಾಕ್ ಪ್ರಧಾನಿ| ಐಸಿಜೆ ತೀರ್ಪು ಸ್ವಾಗತಾರ್ಹ ಎಂದ ಇಮ್ರಾನ್ ಖಾನ್| ಐಸಿಜೆ ತೀರ್ಪು ಸ್ವಾಗತಿಸಿ ಟ್ವೀಟ್ ಮಾಡಿದ ಇಮ್ರಾನ್ ಖಾನ್| ಕುಲಭೂಷಣ್ ಬಿಡುಗಡೆ ಮಾಡುವಂತೆ ಐಸಿಜೆ ಹೇಳಿಲ್ಲ ಎಂದ ಇಮ್ರಾನ್| ಕುಲಭೂಷಣ್ ಪಾಕಿಸ್ತಾನದ ಜನರ ವಿರುದ್ಧದ ಯುದ್ಧದಲ್ಲಿ ಅಪರಾಧಿ ಎಂದ ಪಾಕ್ ಪ್ರಧಾನಿ|

ಇಸ್ಲಾಮಾಬಾದ್(ಜು.18):ಕುಲಭೂಷಣ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಕೋರ್ಟ್ ನೀಡಿರುವ ತೀರ್ಪನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸ್ವಾಗತಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ಐಸಿಜೆ ತೀರ್ಪು ಶ್ಲಾಘನಾರ್ಹ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ತೀರ್ಪನ್ನು ಸಹಜವಾಗಿ ಪಾಕ್ ಕಣ್ಣೋಟದಿಂದ ಕಂಡಿರುವ ಇಮ್ರಾನ್, ಪ್ರಕರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಶೀಘ್ರದಲ್ಲೇ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

Scroll to load tweet…

ಐಸಿಜೆ ಕುಲಭೂಷಣ್ ಜಾಧವ್ ಅವರನ್ನು ತಪ್ಪಿತಸ್ಥನಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಅಲ್ಲದೇ ಆತನನ್ನು ಬಿಡುಗಡೆ ಮಾಡಿ ಎಂದೂ ಆದೇಶಿಸಿಲ್ಲ. ಹೀಗಾಗಿ ಮುಂದಿನ ಕ್ರಮಗಳ ಕುರಿತು ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಪಾಕ್ ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.

ಕುಲಭೂಷಣ್ ಜಾಧವ್ ಪಾಕಿಸ್ತಾನದ ಜನರ ವಿರುದ್ಧದ ಯುದ್ಧದಲ್ಲಿ ಅಪರಾಧಿಯಾಗಿದ್ದು, ಕಾನೂನಾತ್ಮಕವಾಗಿಯೇ ಆತನ ವಿರುದ್ಧದ ತನಿಖೆ ಮುಂದುವರೆಸುತ್ತೇವೆ ಎಂದು ಇಮ್ರಾನ್ ತಿಳಿಸಿದ್ದಾರೆ.

ನಿನ್ನೆ(ಜು.17) ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ಪ್ರಕಟಿಸಿದ್ದ ಐಸಿಜೆ, ಪಾಕಿಸ್ತಾನದ ಸೇನಾ ನ್ಯಾಯಾಲಯ ವಿಧಿಸಿದ್ದ ಮರಣದಂಡನೆಯನ್ನು ರದ್ದುಗೊಳಿಸಿತ್ತು. ಅಲ್ಲದೇ ತೀರ್ಪನ್ನು ಮರುಪರಿಶೀಲನೆ ನಡೆಸುವಂತೆ ಪಾಕಿಸ್ತಾನಕ್ಕೆ ಸೂಚನೆ ನೀಡಿತ್ತು.