ಪರಿಮಳಾ ನಾಗಪ್ಪ ಅವರು ಬಿಜೆಪಿಗೆ ಸೇರ್ಪಡೆಯಾಗುವುದರಿಂದ ಹನೂರು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಬಹಿರಂಗವಾಗಿ ಘೋಷಣೆ ಮಾಡಿಕೊಂಡಿದ್ದ ಬಿಜೆಪಿಯ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ಈ ಬೆಳವಣಿಗೆ ಮುಳುವಾಗುವ ಸಾಧ್ಯತೆಯಿದೆ.

ಬೆಂಗಳೂರು(ಫೆ.28): ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರು ಬರುವ ಮಾ.16ಕ್ಕೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಖುದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೇ ಈ ವಿಷಯ ತಿಳಿಸಿದ್ದಾರೆ. ಮಂಗಳವಾರ ನಗರದಲ್ಲಿ ಕೆಲವು ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ರಾಜ್ಯಾದ್ಯಂತ ಪಕ್ಷಕ್ಕೆ ಉತ್ತಮ ವಾತಾವರಣವಿದೆ. ಅನೇಕ ಮುಖಂಡರು ಬಿಜೆಪಿಗೆ ಆಗಮಿಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದು, ಹನೂರು ಕ್ಷೇತ್ರದ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರು ಮಾ.16ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದರು.

ಸೋಮಣ್ಣಗೆ ತಪ್ಪಿತೆ ಟಿಕೆಟ್?:

ಪರಿಮಳಾ ನಾಗಪ್ಪ ಅವರು ಬಿಜೆಪಿಗೆ ಸೇರ್ಪಡೆಯಾಗುವುದರಿಂದ ಹನೂರು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಬಹಿರಂಗವಾಗಿ ಘೋಷಣೆ ಮಾಡಿಕೊಂಡಿದ್ದ ಬಿಜೆಪಿಯ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ಈ ಬೆಳವಣಿಗೆ ಮುಳುವಾಗುವ ಸಾಧ್ಯತೆಯಿದೆ.

ಸೋಮಣ್ಣ ಅವರು ಕಳೆದ ಹಲವು ತಿಂಗಳುಗಳಿಂದ ಚಾಮರಾಜನಗರ ಜಿಲ್ಲೆಯಲ್ಲಿ ಅನೇಕ ಬಾರಿ ಪ್ರವಾಸ ಕೈಗೊಂಡಿದ್ದರು. ವಿಶೇಷವಾಗಿ ವೀರಶೈವ ಲಿಂಗಾಯತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವ ಹನೂರಿನಿಂದ ಸ್ಪರ್ಧಿಸಲು ಸಿದ್ಧತೆಯನ್ನೂ ನಡೆಸಿದ್ದರು. ಇದೀಗ ಹನೂರು ವಿಧಾನಸಭಾ ಕ್ಷೇತ್ರದಿಂದ ಪರಿಮಳಾ ಅವರನ್ನೇ ಕಣಕ್ಕಿಳಿಸುವ ಸಂಭವ ಹೆಚ್ಚಾಗಿ ಕಂಡು ಬರುತ್ತಿದೆ. ಇದರಿಂದಾಗಿ ಸೋಮಣ್ಣ ಅವರು ಬೆಂಗಳೂರಿನ ಗೋವಿಂದರಾಜನಗರ ಅಥವಾ ವಿಜಯನಗರ ಕ್ಷೇತ್ರಗಳ ಪೈಕಿ ಒಂದರಿಂದ ಸ್ಪರ್ಧಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕು.

(ಕನ್ನಡಪ್ರಭ ವಾರ್ತೆ)