ಪಿಎನ್ಬಿ ವಂಚಕರ ವಿರುದ್ಧ ಕಠಿಣ ಕ್ರಮ: ಮೋದಿ
11,400 ಕೋಟಿ ರು. ಪಿಎನ್ಬಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕೊನೆಗೂ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ನವದೆಹಲಿ: 11,400 ಕೋಟಿ ರು. ಪಿಎನ್ಬಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕೊನೆಗೂ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
‘ಹಣಕಾಸು ಅಕ್ರಮದ ಬಗ್ಗೆ ಈ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ ಮತ್ತು ಕಠಿಣ ಕ್ರಮ ಮುಂದುವರಿಯುತ್ತದೆ ಎಂಬುದನ್ನು ನಾನು ಸ್ಪಷ್ಟಪಡಿಸುತ್ತಿದ್ದೇನೆ’ ಎಂದು ಮೋದಿ ಹೇಳಿದರು. ಎಕಾನಮಿಕ್ ಟೈಮ್ಸ್ ಆಯೋಜಿಸಿದ್ದ ಜಾಗತಿಕ ಉದ್ಯಮ ಸಮಾವೇಶದಲ್ಲಿ ಮಾತನಾಡಿ ಅವರು ಈ ವಿಷಯ ತಿಳಿಸಿದರು. ಸಾರ್ವಜನಿಕರ ಹಣ ಲೂಟಿ ಮಾಡುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಅವರು ಹೇಳಿದರು.
ಯಾವುದೇ ಬ್ಯಾಂಕ್ ವಂಚನೆಯ ಆರೋಪಿಗಳ ಹೆಸರು ಪ್ರಸ್ತಾಪಿಸದ ಪ್ರಧಾನಿ, ಇಂತಹ ವಂಚನೆಗಳನ್ನು ತಡೆಯಲು ಹಣಕಾಸು ಸಂಸ್ಥೆಗಳು, ಲೆಕ್ಕಪರಿಶೋಧಕರು ಮತ್ತು ಮೇಲ್ವಿಚಾರಣಾ ಸಂಸ್ಥೆಗಳು ಶ್ರದ್ಧೆಯಿಂದ ಕಾರ್ಯ ನಿರ್ವಹಿಸಬೇಕು ಹೇಳಿದರು. ‘ನೀತಿ, ನಿಯಮಗಳು ಮತ್ತು ನೈತಿಕತೆ ನಿರ್ವಹಣೆಯ ಜವಾಬ್ದಾರಿ ಹೊತ್ತವರು ತಮ್ಮ ಕರ್ತವ್ಯ ಶ್ರದ್ಧೆ ಮತ್ತು ಬದ್ಧತೆಯಿಂದ ನಿರ್ವಹಿಸಬೇಕು ಎಂದು ಕೋರುತ್ತೇನೆ’ ಎಂದು ಅವರು ತಿಳಿಸಿದರು.