ಬೆಂಗಳೂರಿನಲ್ಲಿಂದು ಮೋದಿ ಧಮಾಕ : 85 ದಿನಗಳ ಪರಿವರ್ತನಾ ಯಾತ್ರೆಯ ಗ್ರ್ಯಾಂಡ್ ಫೈನಲ್
ಮುಂಬರುವ ವಿಧಾನಸಭಾ ಚುನಾವಣೆಗೆ ತಳಮಟ್ಟದಲ್ಲಿ ತಯಾರಿ ನಡೆಸುವ ಮೂಲಕ ಒಂದು ಹಂತದ ಪ್ರಚಾರ ಆರಂಭಿಸಿದ್ದ ಬಿಜೆಪಿಯು ಭಾನುವಾರದಿಂದ ಮತ್ತೊಂದು ಹಂತದ ಪ್ರಚಾರಕ್ಕೆ ಚಾಲನೆ ನೀಡಲಿದೆ.
ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಗೆ ತಳಮಟ್ಟದಲ್ಲಿ ತಯಾರಿ ನಡೆಸುವ ಮೂಲಕ ಒಂದು ಹಂತದ ಪ್ರಚಾರ ಆರಂಭಿಸಿದ್ದ ಬಿಜೆಪಿಯು ಭಾನುವಾರದಿಂದ ಮತ್ತೊಂದು ಹಂತದ ಪ್ರಚಾರಕ್ಕೆ ಚಾಲನೆ ನೀಡಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವ ದಲ್ಲಿ ನಡೆದ ‘ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ’ಯ ಸಮಾರೋಪ ಸಮಾರಂಭ ಭಾನುವಾರ ನಗರದ ಅರಮನೆ ಮೈದಾನದಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡು ರಣಕಹಳೆ ಮೊಳಗಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ಇಲ್ಲದಂತೆ ನಿರ್ವಿಘ್ನವಾಗಿ ನೆರವೇರಿಸಲು ಕಮಲ ನಾಯಕರು ಸಜ್ಜಾಗಿದ್ದಾರೆ. ಸಮಾರಂಭವನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು, ಯಶಸ್ವಿಗೊಳಿಸಲು ಹಲವು ಸಮಿತಿಗಳನ್ನು ರಚಿಸುವ ಮೂಲಕ ಅಚ್ಚು ಕಟ್ಟಾಗಿ ಜವಾಬ್ದಾರಿಯನ್ನು ಹಂಚಿಕೆ ಮಾಡಿದ್ದಾರೆ. 4 ಲಕ್ಷ ಜನ ಸೇರುವ ನಿರೀಕ್ಷೆಯನ್ನು ಬಿಜೆಪಿ ನಾಯಕರು ಹೊಂದಿದ್ದಾರೆ.
ಯಡಿಯೂರಪ್ಪ ನಿರ್ದೇಶನದಲ್ಲಿ ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಪ್ರಕಾಶ್ ಜಾವಡೇಕರ್, ಪಿಯೂಷ್ ಗೋಯಲ್, ರಾಜ್ಯ ಉಸ್ತುವಾರಿ ಮುರಳೀಧರ ರಾವ್, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಸೇರಿದಂತೆ ಕಾರ್ಯಕ್ರಮದ ಯಶಸ್ಸಿಗೆ ಟೊಂಕ ಕಟ್ಟಿದ್ದಾರೆ. ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೆಹಲಿಯಿಂದ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿಗಳು ಮೇಖ್ರಿ ವೃತ್ತದ ಬಳಿ ಇರುವ ವಾಯು ಸೇನೆಯ ತರಬೇತಿ ಕೇಂದ್ರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಅರಮನೆ ಮೈದಾನದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ ಸಮತಟ್ಟವಾಗಿಲ್ಲ ಎಂಬ ಕಾರಣಕ್ಕಾಗಿ ವಿಶೇಷ ಭದ್ರತಾ ಪಡೆಯು (ಎಸ್ಪಿಜಿ) ಅಲ್ಲಿ ಹೆಲಿಕಾಪ್ಟರ್ ಇಳಿಯಲು ಅನುಮತಿ ನೀಡಿಲ್ಲ.