ಟಿಕೆಟ್ ಕೊಟ್ಟರೆ ರಾಜರಾಜೇಶ್ವರಿ ನಗರದಿಂದ ಸ್ಪರ್ಧೆ: ಪ್ರಜ್ವಲ್
ರಾಜ್ಯ ವಿಧಾನಸಭಾ ಚುನಾವಣೆಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕುಟುಂಬದಲ್ಲಿ ಟಿಕೆಟ್ ವಿಚಾರಕ್ಕೆ ಮನಸ್ತಾಪ ಇರುವುದು ಮತ್ತೆ ಸಾಬೀತಾಗಿದೆ. ತಮ್ಮ ಕುಟುಂಬದಿಂದ ಇಬ್ಬರೇ ಕಣಕ್ಕಿಳಿಯುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದರೂ, ಗೌಡರ ಮೊಮ್ಮಗ ಆಗಿರುವ ಯುವ ಮುಖಂಡ ಪ್ರಜ್ವಲ್ ರೇವಣ್ಣ ತಾವು ರಾಜರಾಜೇಶ್ವರಿ ನಗರ (ಆರ್.ಆರ್.ನಗರ) ಕ್ಷೇತ್ರದ ಆಕಾಂಕ್ಷಿ ಎಂಬುದನ್ನು ಮತ್ತೊಮ್ಮೆ ಹೇಳಿದ್ದಾರೆ.
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕುಟುಂಬದಲ್ಲಿ ಟಿಕೆಟ್ ವಿಚಾರಕ್ಕೆ ಮನಸ್ತಾಪ ಇರುವುದು ಮತ್ತೆ ಸಾಬೀತಾಗಿದೆ. ತಮ್ಮ ಕುಟುಂಬದಿಂದ ಇಬ್ಬರೇ ಕಣಕ್ಕಿಳಿಯುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದರೂ, ಗೌಡರ ಮೊಮ್ಮಗ ಆಗಿರುವ ಯುವ ಮುಖಂಡ ಪ್ರಜ್ವಲ್ ರೇವಣ್ಣ ತಾವು ರಾಜರಾಜೇಶ್ವರಿ ನಗರ (ಆರ್.ಆರ್.ನಗರ) ಕ್ಷೇತ್ರದ ಆಕಾಂಕ್ಷಿ ಎಂಬುದನ್ನು ಮತ್ತೊಮ್ಮೆ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಗೆ ಪಕ್ಷವು ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದರೆ ಪಕ್ಷದ ಪರವಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತೇನೆ ಎಂದು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿಯಲ್ಲಿನ ಶಾರದಾ ದೇವಾಲಯ ಉದ್ಘಾಟಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಿದರೆ ಸಂತೋಷ. ಇಲ್ಲವಾದರೆ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ರಾಜರಾಜೇಶ್ವರಿನಗರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಪಕ್ಷ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದರು.
ಆರ್.ಆರ್.ನಗರದ ಶಾಸಕ ಮುನಿರತ್ನ ಅವರ ದುರಾಡಳಿತದ ವಿರುದ್ಧ ಕ್ಷೇತ್ರದ ಜನರು ರೋಸಿ ಹೋಗಿದ್ದಾರೆ. ನಮ್ಮ ಕುಟುಂಬದ ಯಾರಾದರೂ ಇಲ್ಲಿ ಮಾಡಬೇಕು ಎಂಬುದು ಜನರ ಆಶಯವಾಗಿದೆ. ಆದರೆ, ನನಗೆ ಟಿಕೆಟ್ ನೀಡುವುದು ದೊಡ್ಡವರಿಗೆ ಬಿಟ್ಟವಿಚಾರ. ನಾನಾಗಲಿ ಅಥವಾ ಕುಮಾರಸ್ವಾಮಿ ಅವರಾಗಲಿ ಗೊಂದಲ ಮಾಡಿಕೊಂಡಿಲ್ಲ ಎಂದು ಹೇಳಿದರು.