ಕರ್ನಾಟಕ ಸರ್ಕಾರದ ವಿರುದ್ಧ ಮತ್ತೆ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ರೈತರ ಸಮಸ್ಯೆ ಬಗೆಹರಿಸುವ ಬದಲು ರೈತರನ್ನು ಜೈಲಿಗೆ ಕಳುಹಿಸಲು ಸಜ್ಜಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಝಬುವಾ : ರೈತರ ಸಾಲ ಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತೆ ತರಾಟೆಗೆ ತೆಗೆದುಕೊಂಡಿದ್ದಾರೆ. ರೈತರ ಸಾಲ ಮನ್ನಾ ಮಾಡುವ ಬದಲು, ಕರ್ನಾಟಕದ ಕಾಂಗ್ರೆಸ್‌ ಸರ್ಕಾರ, ರೈತರನ್ನು ಜೈಲಿಗೆ ಕಳುಹಿಸಲು ಸಜ್ಜಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳವಾರ ಮಧ್ಯಪ್ರದೇಶದ ಝಬುವಾದಲ್ಲಿ ಬಿಜೆಪಿಯ ಚುನಾವಣಾ ರಾರ‍ಯಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ, ಅಧಿಕಾರಕ್ಕೆ ಬಂದರೆ ರೈತರ ಪೂರ್ಣ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್‌ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ಬಳಿಕ ಭರವಸೆ ಈಡೇರಿಸುವ ಬದಲು ರಾಜ್ಯ ಸರ್ಕಾರ, ರೈತರನ್ನು ಜೈಲಿಗೆ ಕಳುಹಿಸಲು ಸಜ್ಜಾಗುತ್ತಿದೆ. ಇದರೊಂದಿಗೆ ರೈತರ ಸಮಸ್ಯೆ ಬಗೆಹರಿಸುವ ವಿಷಯದಲ್ಲಿ ಕಾಂಗ್ರೆಸ್‌ನದ್ದು ಕೇವಲ ಕಣ್ಣೊರೆಸುವ ತಂತ್ರ ಎಂಬುದು ಸಾಬೀತಾಗಿದೆ’ ಎಂದು ಟೀಕಿಸಿದ್ದಾರೆ.

ಎರಡು ದಿನಗಳ ಹಿಂದೆ ಛತ್ತೀಸ್‌ಗಡದ ರಾಯ್‌ಪುರದಲ್ಲಿ ನಡೆದ ಬಿಜೆಪಿ ಚುನಾವಣಾ ರಾರ‍ಯಲಿಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಅಲ್ಲಿಯೂ ರೈತರ ಸಾಲ ಮನ್ನಾ ವಿಷಯದಲ್ಲಿ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ರೈತರಿಗೆ ವಂಚಿಸಿದೆ ಎಂದು ಆರೋಪಿಸಿದ್ದರು. ಜೊತೆಗೆ ಸಾಲ ಮನ್ನಾ ಭರವಸೆ ಈಡೇರಿಸುವ ಬದಲು, ಸಾಲ ಬಾಕಿ ಉಳಿಸಿಕೊಂಡ ರೈತರಿಗೆ ನೋಟಿಸ್‌ ಜಾರಿ ಮಾಡುವ ಅವರ ವಿರುದ್ಧ ವಾರಂಟ್‌ ಹೊರಡಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದ್ದರು.

ಇದಕ್ಕೆ ಸೋಮವಾರ, ಪ್ರತಿಕ್ರಿಯೆ ನೀಡಿದ್ದ ಕರ್ನಾಟಕದ ಸಿಎಂ ಕುಮಾರಸ್ವಾಮಿ, ರಾಜ್ಯ ಸರ್ಕಾರ ರೈತರ 45000 ಕೋಟಿ ರು. ಸಾಲ ಮನ್ನಾ ಮಾಡಿದೆ. ಇದರ ಹೊರತಾಗಿಯೂ ಪ್ರಧಾನಿ ನೀಡಿರುವ ಹೇಳಿಕೆಯಿಂದ ದಿಗ್ಭ್ರಮೆ ಉಂಟಾಗಿದೆ ಎಂದು ಹೇಳಿದ್ದರು. ಅದರ ಬೆನ್ನಲ್ಲೇ, ಪ್ರಧಾನಿ ಮೋದಿ, ಮತ್ತೊಮ್ಮೆ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.