ಪ್ರವಾಹಪೀಡಿತ ಜಿಲ್ಲೆಗಳ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದ್ವಿಪ್ರತಿ ಅಂಕಪಟ್ಟಿಮತ್ತು ಇತರೆ ಶೈಕ್ಷಣಿಕ ದಾಖಲೆಗಳನ್ನು ಶುಲ್ಕರಹಿತವಾಗಿ ಶೀಘ್ರದಲ್ಲಿಯೇ ವಿತರಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಬೆಂಗಳೂರು (ಆ. 20): ಪ್ರವಾಹಪೀಡಿತ ಜಿಲ್ಲೆಗಳ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದ್ವಿಪ್ರತಿ ಅಂಕಪಟ್ಟಿಮತ್ತು ಇತರೆ ಶೈಕ್ಷಣಿಕ ದಾಖಲೆಗಳನ್ನು ಶುಲ್ಕರಹಿತವಾಗಿ ಶೀಘ್ರದಲ್ಲಿಯೇ ವಿತರಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

Add Asianetnews Kannada as a Preferred SourcegooglePreferred

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ತೀವ್ರ ಮಳೆ ಸುರಿದ ಪರಿಣಾಮ ವಿದ್ಯಾರ್ಥಿಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳ ಅಂಕಪಟ್ಟಿ, ಶಿಕ್ಷಣ ಹಾಗೂ ವ್ಯಾಸಂಗಕ್ಕೆ ಸಂಬಂಧಿಸಿದ ದಾಖಲೆಗಳಿಗೆ ಹಾನಿಯಾಗಿದ್ದರೆ ಅಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದರೆ ನಿಯಮಾನುಸಾರ ಕಾಲೇಜು ಹಾಗೂ ಜಿಲ್ಲಾ ಉಪ ನಿರ್ದೇಶಕರುಗಳ ಮೂಲಕ ವಿತರಿಸಲಾಗುವುದು ಎಂದಿದೆ.

ಅಂಕಪಟ್ಟಿಮತ್ತು ದಾಖಲೆಗಳಿಗಾಗಿ ವಿದ್ಯಾರ್ಥಿಗಳು ಅಥವಾ ಪೋಷಕರು ಪಿಯು ಇಲಾಖೆ ಕೇಂದ್ರ ಕಚೇರಿಗೆ ಭೇಟಿ ನೀಡುವ ಅಗತ್ಯವಿಲ್ಲ. ಡಿಡಿಪಿಯು ಮೂಲಕ ಅರ್ಜಿ ಸಲ್ಲಿಸಿದರೆ ಸಾಕು. ನಂತರ ದಾಖಲೆಗಳನ್ನು ಕಾಲೇಜುಗಳಿಗೆ ತಲುಪಿಸಲಾಗುವುದು. ಕೆಲವು ಶೈಕ್ಷಣಿಕ ದಾಖಲೆ ಪತ್ರಗಳನ್ನು ಡಿಡಿಪಿಯು ಮತ್ತು ಕಾಲೇಜು ಹಂತದಲ್ಲಿಯೇ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪಿಯು ಇಲಾಖೆ ತಿಳಿಸಿದೆ.

ಮೂಲ ಸೌಕರ್ಯ ಸುಧಾರಣೆಗೆ ಸಮಿತಿ:

ಪ್ರವಾಹದಿಂದ ಹಾನಿಯಾಗಿರುವ ಪಿಯು ಕಾಲೇಜುಗಳ ಮೂಲ ಸೌಕರ್ಯಗಳು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಸುಧಾರಣೆಗಾಗಿ ಇಲಾಖೆಯು ಸಾಕಷ್ಟುಕ್ರಮಗಳನ್ನು ಕೈಗೊಂಡಿದೆ. ಈ ಕಾರ್ಯಕ್ರಮಗಳ ಅನುಷ್ಠಾನ ಸರಿಯಾದ ರೀತಿಯಲ್ಲಿ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಡಿಡಿಪಿಯು ಅಧ್ಯಕ್ಷತೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಪಿಯು ಕಾಲೇಜುಗಳ ಐದು ಪ್ರಾಂಶುಪಾಲರನ್ನು ಒಳಗೊಂಡ ಸಮಿತಿ ರಚಿಸಲು ಸೂಚಿಸಿದೆ. ಶೈಕ್ಷಣಿಕ ಪ್ರಗತಿ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರ ನೀಡಲಾಗಿದೆ.

ಪ್ರಥಮ ಪಿಯು ದಾಖಲಾತಿ ಅವಧಿ ವಿಸ್ತರಣೆ:

ಪ್ರವಾಹಕ್ಕೆ ತುತ್ತಾಗಿರುವ ರಾಜ್ಯದ 17 ಜಿಲ್ಲೆಗಳಲ್ಲಿ 2019-20ನೇ ಸಾಲಿನ ಪ್ರಥಮ ಪಿಯುಸಿ ದಾಖಲಾತಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಆ.23ರ ವರೆಗೆ ದಾಖಲಾತಿ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.