ರಾಘವೇಶ್ವರ ಶ್ರೀ ಕೇಸಿಂದ ಮತ್ತೊಬ್ಬ ಜಡ್ಜ್ ವಾಪಸ್
ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿ ಬೆಂಗಳೂರು ನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಆದೇಶ ರದ್ದು ಕೋರಿ ಸಲ್ಲಿಸಲಾಗಿದ್ದ ಕ್ರಿಮಿನಲ್ ಮೇಲ್ಮನವಿಯ ವಿಚಾರಣೆಯಿಂದ ನ್ಯಾಯ ಮೂರ್ತಿ ಕೆ.ಎನ್ .ಫಣೀಂದ್ರ ಶುಕ್ರವಾರ ಹಿಂದೆ ಸರಿದರು
ಬೆಂಗಳೂರು (ಜ.13): ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿ ಬೆಂಗಳೂರು ನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಆದೇಶ ರದ್ದು ಕೋರಿ ಸಲ್ಲಿಸಲಾಗಿದ್ದ ಕ್ರಿಮಿನಲ್ ಮೇಲ್ಮನವಿಯ ವಿಚಾರಣೆಯಿಂದ ನ್ಯಾಯ ಮೂರ್ತಿ ಕೆ.ಎನ್ .ಫಣೀಂದ್ರ ಶುಕ್ರವಾರ ಹಿಂದೆ ಸರಿದರು.
ರಾಮಕಥಾ ಗಾಯಕಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯ ಶುಕ್ರವಾರ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿದ್ದ ಏಕ ಸದಸ್ಯ ಪೀಠದ ಎದುರು ವಿಚಾರಣೆಗೆ ಬಂದಿತ್ತು. ಆದರೆ, ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದ ಈ ಹಿಂದೆ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ವಿಚಾರಣೆ ವೇಳೆ ಪ್ರಕರಣದ ಸಂತ್ರಸ್ತೆ (ರಾಮಕಥಾ ಗಾಯಕಿ) ನನ್ನ ವಿರುದ್ಧ ಅವಿಶ್ವಾಸ ವ್ಯಕ್ತಪಡಿಸಿ ರಾಷ್ಟ್ರಪತಿಗಳು ಹಾಗೂ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು.
ಅದರಿಂದ ಆ ವಿಚಾರಣೆಯಿಂದ ನಾನು ಆಗ ಹಿಂದೆ ಸರಿದ್ದೆ. ಈ ಮೇಲ್ಮನವಿಯೂ ಅದೇ ಪ್ರಕರಣಕ್ಕೆ ಸಂಬಂಧಿಸಿದ ಕಾರಣ, ಮತ್ತೆ ನಾನು ಇದರ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.