ಸಿಎಂ ಕುಮಾರಸ್ವಾಮಿ ಅವರನ್ನು ಹೊಗಳಿದ ರಾಹುಲ್ ಗಾಂಧಿ
ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೊಗಳಿದ್ದಾರೆ. ಕರ್ನಾಟಕದಲ್ಲಿ ನಮ್ಮ ಸರ್ಕಾರ ಸಾಲ ಮನ್ನಾ ಮಾಡುವ ಮೂಲಕ ರೈತರಿಗೆ ನ್ಯಾಯ ಒದಗಿಸಿದೆ ಎಂದು ಹೇಳಿದ್ದಾರೆ.
ಅಮೇಠಿ: ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಬಜೆಟ್ನಲ್ಲಿ ರೈತರ 34,000 ಕೋಟಿ ರು. ಸಾಲ ಮನ್ನಾ ಮಾಡಿದ್ದನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ಶ್ಲಾಘಿಸಿದ್ದಾರೆ.
ತಮ್ಮ ಲೋಕಸಭಾ ಕ್ಷೇತ್ರ ಅಮೇಠಿಗೆ ನೀಡಿದ್ದ ಎರಡು ದಿನಗಳ ಭೇಟಿಯ ಬಳಿಕ ರೈತರ ಜೊತೆ ಸಂವಾದ ವೇಳೆ ಮಾತನಾಡಿದ ರಾಹುಲ್, ಕರ್ನಾಟಕದಲ್ಲಿ ನಮ್ಮ ಸರ್ಕಾರ ಸಾಲ ಮನ್ನಾ ಮಾಡುವ ಮೂಲಕ ರೈತರಿಗೆ ನ್ಯಾಯ ಒದಗಿಸಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಒಂದು ವೇಳೆ ನೀವು ಶ್ರೀಮಂತ ಜನರ ಸಾಲ ಮನ್ನಾ ಮಾಡುವುದಾದರೆ, ರೈತರ ಸಾಲವನ್ನೂ ಮನ್ನಾ ಮಾಡಬೇಕು ಎಂದು ಕೇಂದ್ರದ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಜೊತೆಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರೇ ನಮ್ಮ ಮುಖ್ಯ ಆದ್ಯತೆಯಾಗಲಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ.