ರಾಜ್ಯದಲ್ಲೂ ರಾಹುಲ್ ಮೃದು ಹಿಂದುತ್ವ ಜಪ
ಇದರ ಆರಂಭ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಿಂದ ಸಾಧ್ಯತೆಯಿದೆ. ರಾಹುಲ್ ಗಾಂಧಿ ಅವರ ಅಜ್ಜಿ ಇಂದಿರಾ ಗಾಂಧಿ ಅವರು ಚಿಕ್ಕಮಗಳೂರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ಶೃಂಗೇರಿಯಿಂದಲೇ ತಮ್ಮ ಪ್ರಚಾರ ಕಾರ್ಯ ಆರಂಭಿಸಿದ್ದರು. ಅದೇ ರೀತಿ ರಾಹುಲ್ ಗಾಂಧಿ ಅವರು ಸಹ ತಮ್ಮ ಪ್ರವಾಸದ ವೇಳೆ ಶೃಂಗೇರಿಗೆ ಭೇಟಿ ನೀಡುವ ಸಾಧ್ಯತೆ ದಟ್ಟವಾಗಿದೆ.
ಬೆಂಗಳೂರು(ಡಿ.21): ಕಾಂಗ್ರೆಸ್ ಪಕ್ಷವು ಗುಜರಾತ್ನಲ್ಲಿ ಯಶಸ್ವಿ ತಂತ್ರವಾಗಿ ಪ್ರಯೋಗಿಸಿದ ಮೃದು ಹಿಂದುತ್ವವನ್ನು ಕರ್ನಾಟಕದಲ್ಲೂ ಪ್ರಯೋಗಿಸಲಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜನವರಿ ಮಾಸದಲ್ಲಿ ಕೈಗೊಳ್ಳುವ ರಾಜ್ಯ ಪ್ರವಾಸ ವೇಳೆ ಹಲವು ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.
ಇದರ ಆರಂಭ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಿಂದ ಸಾಧ್ಯತೆಯಿದೆ. ರಾಹುಲ್ ಗಾಂಧಿ ಅವರ ಅಜ್ಜಿ ಇಂದಿರಾ ಗಾಂಧಿ ಅವರು ಚಿಕ್ಕಮಗಳೂರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ಶೃಂಗೇರಿಯಿಂದಲೇ ತಮ್ಮ ಪ್ರಚಾರ ಕಾರ್ಯ ಆರಂಭಿಸಿದ್ದರು. ಅದೇ ರೀತಿ ರಾಹುಲ್ ಗಾಂಧಿ ಅವರು ಸಹ ತಮ್ಮ ಪ್ರವಾಸದ ವೇಳೆ ಶೃಂಗೇರಿಗೆ ಭೇಟಿ ನೀಡುವ ಸಾಧ್ಯತೆ ದಟ್ಟವಾಗಿದೆ.
ಇದಲ್ಲದೆ, ಇನ್ನು ಹಲವು ಪ್ರಮುಖ ದೇವಾಲಯ, ಮಸೀದಿ ಹಾಗೂ ಇಗರ್ಜಿಗಳಿಗೆ ಅವರು ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ದಿನಾಂಕ ನಿಗದಿ ಇಲ್ಲ: ಈ ವಿಷಯವನ್ನು ದೃಢಪಡಿಸಿದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು, ಗುಜರಾತಿನಲ್ಲಿ ರಾಹುಲ್ಗಾಂಧಿ ಪಕ್ಷವನ್ನು ಅಧಿಕಾರಕ್ಕೆ ತರುವುದಕ್ಕೆ ಬಹಳಷ್ಟು ಶ್ರಮ ಹಾಕಿದ್ದಾರೆ. ರಾಜ್ಯಕ್ಕೆ ಬಂದಾಗಲೂ ಅವರು ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ. ಆದರೆ ಚುನಾವಣಾ ಪ್ರಚಾರಕ್ಕೆ ಯಾವಾಗ ಬರುತ್ತಾರೆ? ಯಾವ ದೇವಾಲಯಗಳಿಗೆ ಭೇಟಿ ನೀಡುತ್ತಾರೆ ಎನ್ನುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಹೇಳಿದ್ದಾರೆ. ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಹುಲ್ ಅವರಿಗೆ ಅಭಿನಂದನೆ ಸಲ್ಲಿಸಲು ಬೆಂಗಳೂರು ಹಾಗೂ ಚಿಕ್ಕಮಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಿದ್ದು ಅವರ ದಿನಾಂಕಕ್ಕಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.