2018ರ ಚುನಾವಣೆಗೆ ಕಾಂಗ್ರೆಸ್ ಭಾರೀ ತಯಾರಿ ನಡೆಸಿದ್ದು, ಈ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ನಾಯಕರಿಗೆ ಪಾಠ ಮಾಡಲಿದ್ದಾರೆ.ಇದೇ ವೇಳೆ, ರಾಜ್ಯ ಕಾಂಗ್ರೆಸ್ ನಲ್ಲಿನ ಭಿನ್ನಮತದ ಬಿಸಿ ರಾಹುಲ್​'ಗೆ ತಟ್ಟುವ ಸಾಧ್ಯತೆ ಹೆಚ್ಚಿದೆ.

ಬೆಂಗಳೂರು(ಜೂ.12): 2018ರ ಚುನಾವಣೆಗೆ ಕಾಂಗ್ರೆಸ್ ಭಾರೀ ತಯಾರಿ ನಡೆಸಿದ್ದು, ಈ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ನಾಯಕರಿಗೆ ಪಾಠ ಮಾಡಲಿದ್ದಾರೆ.ಇದೇ ವೇಳೆ, ರಾಜ್ಯ ಕಾಂಗ್ರೆಸ್ ನಲ್ಲಿನ ಭಿನ್ನಮತದ ಬಿಸಿ ರಾಹುಲ್​'ಗೆ ತಟ್ಟುವ ಸಾಧ್ಯತೆ ಹೆಚ್ಚಿದೆ.

Add Asianetnews Kannada as a Preferred SourcegooglePreferred

ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಜ್ಯ ಕೈ ನಾಯಕರೊಂದಿಗೆ ರಾಹುಲ್ ಸಭೆ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ರಾಜ್ಯ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮದ ಬಳಿಕ ರಾಹುಲ್ ಪಕ್ಷದ ಮುಖಂಡರ ಸಭೆ ನಡೆಸಲಿದ್ದಾರೆ. 2018ರ ವಿಧಾನಸಭೆ ಚುನಾವಣೆಯ ತಯಾರಿ ಮತ್ತು ಪಕ್ಷ ಸಂಘಟನೆ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಪಾಠ ಮಾಡಲಿದ್ದಾರೆ.

ರಾಹುಲ್ ಗೆ ಸಾಥ್ ನೀಡಲಿದ್ದಾರೆ ಸಿದ್ದರಾಮಯ್ಯ, ಪರಮೇಶ್ವರ್

ರಾಹುಲ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಕಾರ್ಯಾಧ್ಯಕ್ಷರು, ಪ್ರಚಾರ ಸಮಿತಿ ಸದಸ್ಯರು, ಹಾಲಿ ಮತ್ತು ಮಾಜಿ ಶಾಸಕರು, ಸಚಿವರು, ಸಂಸದರು, ಜಿಲ್ಲಾ ಮುಖಂಡರು ಸೇರಿ 1500 ನಾಯಕರು ರಾಹುಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯ ಕಾಂಗ್ರೆಸ್​ನಲ್ಲಿನ ಭಿನ್ನಮತದ ಬಿಸಿ ರಾಹುಲ್​ಗೆ ತಟ್ಟಲಿದೆಯಾ?

ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ನಾಯಕರು ಸಭೆಯಲ್ಲಿ ರಾಹುಲ್ ಗೆ ದೂರು ನೀಡೋ ಸಾಧ್ಯತೆ ಹೆಚ್ಚಿದೆ. ಇದೇ ವೇಳೆ, ಹಾಲಿ 39 ಶಾಸಕರಿಗೆ ಟಿಕೆಟ್ ಇಲ್ಲ ಅನ್ನೋ ಹೈಕಮಾಂಡ್ ತೀರ್ಮಾನದ ವಿರುದ್ಧ ಶಾಸಕರು ಆಕ್ರೋಶ ವ್ಯಕ್ತಪಡಿಸಿಸು ಸಾಧ್ಯತೆಯೂ ಹೆಚ್ಚಿದೆ ಎನ್ನಲಾಗಿದೆ.

ಮೋದಿ, ಅಮಿತ್ ಷಾ ತಂತ್ರಕ್ಕೆ ಪ್ರತಿ ತಂತ್ರದ ಬಗ್ಗೆ ರಾಹುಲ್ ನೀಡಲಿದ್ದಾರೆ ಟಿಪ್ಸ್

ಇದೆಲ್ಲದರ ಹೊರತಾಗಿ ರಾಹುಲ್ ಮುಂದಿನ ಚುನಾವಣೆಯನ್ನು ದೃಷ್ಟಿಕೋನದಲ್ಲಿಟ್ಟುಕೊಂಡು ರಾಜ್ಯ ನಾಯಕರಿಗೆ ಪಾಠ ಮಾಡಲಿದ್ದಾರೆ ಎನ್ನಲಾಗಿದೆ. ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಗೆಲುವಿನ ಓಟಕ್ಕೆ ಕರ್ನಾಟಕದಿಂದಲೇ ಬ್ರೇಕ್ ಹಾಕಬೇಕು. ಆ ನಿಟ್ಟಿನಲ್ಲಿ ಪಕ್ಷವನ್ನ ಎಲೆಕ್ಸನ್​ಗೆ ಸರ್ವಸನ್ನದ್ಧಗೊಳಿಸುವುದು ಹೇಗೆ ಎಂಬುದರ ಬಗ್ಗೆ ಸೂಚನೆಗಳನ್ನ ರಾಹುಲ್ ನೀಡಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ರಾಜ್ಯ ಪದಾಧಿಕಾರಿಗಳ ನೇಮಕದಿಂದ ಅತೃಪ್ತಗೊಂಡಿರುವ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯ ಸೂಚನೆಗಳಿಗೆ ಹೇಗೆ ಸ್ಪಂದಿಸುತ್ತಾರೆ ಮತ್ತು ಪಕ್ಷ ಸಂಘಟನೆ ಬಗ್ಗೆ ರಾಹುಲ್ ಕೇಳುವ ಪ್ರಶ್ನೆಗಳಿಗೆ ರಾಜ್ಯ ನಾಯಕರು ಹೇಗೆ ಪ್ರತಿಕ್ರಿಯಿಸುತ್ತಾರೆ ಎನ್ನುವ ಉತ್ತರಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರು ಕಾಯ್ತಿದ್ದಾರೆ.