ರಾಜ್ಯದಲ್ಲಿ ಮಳೆಗೆ ಇಬ್ಬರು ಬಲಿ
ರಾಜ್ಯದ ವಿವಿಧೆಡೆ ಭಾನುವಾರವೂ ಮಳೆ ಮುಂದುವರೆದಿದ್ದು, ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಇಬ್ಬರು ಬಲಿಯಾಗಿದ್ದಾರೆ.
ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರವೂ ಮಳೆ ಮುಂದುವರೆದಿದ್ದು, ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಇಬ್ಬರು ಬಲಿಯಾಗಿದ್ದಾರೆ.
ವಿಜಯಪುರ ಜಿಲ್ಲೆ ರತ್ನಾಪುರ ತಾಂಡದಲ್ಲಿ ಶನಿವಾರ ರಾತ್ರಿ ಸುರಿದ ಆಲಿಕಲ್ಲು ಮಳೆಯ ಹೊಡೆತಕ್ಕೆ ಅರ್ಜುನ ಖೋತ (60) ಎಂಬುವರು ಮೃತಪಟ್ಟಿದ್ದಾರೆ. ಆಡು ಮೇಯಿಸಲು ತೆರದ್ದಾಗ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆ ಚಂದಾಪೂರದಲ್ಲಿ ಭಾರಿ ಮಳೆಗೆ ಮನೆ ಮುಂದಿನ ತಗಡಿನ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತೆಗೆಯಲು ಹೋಗಿ ಕೃಷ್ಣ ಶಂಕರ (40) ಎಂಬುವರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಅವರ ಪತ್ನಿ ಭಾಗ್ಯಶ್ರಿ ಮತ್ತು ಮಾವ ಗಾಯಗೊಂಡಿದ್ದು, ಇಬ್ಬರನ್ನೂ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಕನ್ನಡ ಜಿಲ್ಲೆ ಶಿರಸಿಯಲ್ಲಿ ಭಾನುವಾರ 15 ನಿಮಿಷಕ್ಕೂ ಹೆಚ್ಚು ಕಾಲ ತುಂತುರು ಮಳೆಯಾಗಿದೆ. ಧಾರವಾಡದಲ್ಲೂ ಉತ್ತಮ ಮಳೆ ಬಿದ್ದಿದೆ.