ಎಚ್ಚರ : ಇನ್ನೂ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ
ತಮಿಳುನಾಡಿನ ಕರಾವಳಿ ಸಮೀಪ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮಧ್ಯಾಹ್ನದಿಂದ ನಿರಂತರ ವಾಗಿ ಮಳೆಯಾಗುತ್ತಿದೆ. ಕರಾವಳಿಯನ್ನೂ ಒಳಗೊಂಡಂತೆ ದಕ್ಷಿಣ ಒಳನಾಡಿನಲ್ಲಿ ಇನ್ನೂ ಮೂರು ದಿನ ಇದೇ ರೀತಿ ಮಳೆ ಮುಂದುವರೆಯಲಿದೆಯಲ್ಲದೆ, ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು : ತಮಿಳುನಾಡಿನ ಕರಾವಳಿ ಸಮೀಪ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮಧ್ಯಾಹ್ನದಿಂದ ನಿರಂತರ ವಾಗಿ ಮಳೆಯಾಗುತ್ತಿದೆ. ಕರಾವಳಿಯನ್ನೂ ಒಳಗೊಂಡಂತೆ ದಕ್ಷಿಣ ಒಳನಾಡಿನಲ್ಲಿ ಇನ್ನೂ ಮೂರು ದಿನ ಇದೇ ರೀತಿ ಮಳೆ ಮುಂದುವರೆಯಲಿದೆಯಲ್ಲದೆ, ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮೇಲ್ಮೈ ಸುಳಿಗಾಳಿಯಿಂದ ರಾಜ್ಯದ ಒಳನಾಡಿನಲ್ಲಿ ಮೋಡಗಳು ಸಾಧಾರಣ ಮಟ್ಟಕ್ಕಿಂತ ಕೆಳಹಂತದಲ್ಲಿ ಚಲಿಸುವುದರಿಂದ ರಾಜ್ಯದ ಕೆಲವೆಡೆ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರು, ಬೆಂ. ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಶುಕ್ರವಾರ ಮಧ್ಯಾಹ್ನದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ2.5 ಮಿ.ಮೀ.ನಿಂದ 81 ಮಿ.ಮೀ.ವರೆಗೆ ಮಳೆ ಸುರಿದಿದೆ.
ಇನ್ನು ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳ ಭಾಗಶಃ ಪ್ರದೇಶಗಳಲ್ಲಿ ಕೂಡ ನಿರಂತರ ಮಳೆ ಸುರಿಯಲಾರಂಭಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅಲ್ಲಲ್ಲಿ ಮಳೆಯಾಗಿದೆ. ರಾತ್ರಿ 8.30 ರವರೆಗೆ ರಾಮನಗರ ಜಿಲ್ಲೆಯಲ್ಲಿ 81 ಮಿ.ಮೀ. ಗರಿಷ್ಠ ಪ್ರಮಾಣದ ಮಳೆ ದಾಖಲಾಗಿತ್ತು.