ಈಶಾನ್ಯದಲ್ಲಿ ಬಿಜೆಪಿ ಜಯದ ರೂವಾರಿ ಈಗ ರಾಜ್ಯದಲ್ಲಿ
ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ರಾಜ್ಯಕ್ಕೆ ಆಗಮಿಸಿ ಚುನಾವಣಾ ರಣತಂತ್ರ ಹೆಣೆಯುವಲ್ಲಿ ಪಕ್ಷದ ಪ್ರಮುಖರ ಕೈಜೋಡಿಸಿದ್ದಾರೆ.
ಬೆಂಗಳೂರು : ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ರಾಜ್ಯಕ್ಕೆ ಆಗಮಿಸಿ ಚುನಾವಣಾ ರಣತಂತ್ರ ಹೆಣೆಯುವಲ್ಲಿ ಪಕ್ಷದ ಪ್ರಮುಖರ ಕೈಜೋಡಿಸಿದ್ದಾರೆ.
ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಶುಕ್ರವಾರ ಅವರು ಯಲಹಂಕ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಳೀಯ ಶಾಸಕ ಎಸ್.ಆರ್.ವಿಶ್ವನಾಥ್ ಅವರೊಂದಿಗೆ ಮನೆ ಮನೆಗೆ ತೆರಳಿ ಪ್ರಚಾರ ಕೈಗೊಂಡರು.
ಗುರುವಾರ ರಾತ್ರಿಯೇ ನಗರಕ್ಕೆ ಆಗಮಿಸಿದ ಅವರು ಪಕ್ಷದ ಮುಖಂಡರಲ್ಲದೆ ಸಂಘ ಪರಿವಾರದ ಮುಖಂಡರೊಂದಿಗೂ ಸುದೀರ್ಘ ಸಮಾಲೋಚನೆ ನಡೆಸಿದರು. ಚುನಾವಣೆಯಲ್ಲಿ ಅನುಸರಿಸಬೇಕಾದ ತಂತ್ರಗಳು, ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಳ್ಳಬೇಕಾದ ಚುನಾವಣಾ ಪ್ರಚಾರದ ರೂಪುರೇಷೆ ಬಗ್ಗೆಯೂ ಚರ್ಚೆ ಮಾಡಿದರು ಎಂದು ಮೂಲಗಳು ತಿಳಿಸಿವೆ.
ಇನ್ನೂ ಎರಡು ದಿನಗಳ ರಾಮ್ ಮಾಧವ್ ಅವರು ನಗರದಲ್ಲೇ ವಾಸ್ತವ್ಯ ಹೂಡಿ ಪ್ರಚಾರ ತಂತ್ರ ರೂಪಿಸುವ ಸಾಧ್ಯತೆಯಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.