ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿಯ ಭಿನ್ನಮತ ಬಿಜೆಪಿಗೆ ಲಾಭವಾಗಿ ಪರಿಣಮಿಸಿದೆ.

ಬೆಂಗಳೂರು, ಅ. 11: ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿಯ ಭಿನ್ನಮತ ಬಿಜೆಪಿಗೆ ಲಾಭವಾಗಿ ಪರಿಣಮಿಸಿದ್ದು, ಸ್ಥಳೀಯ ವಿಧಾನಪರಿಷತ್‌ ಸದಸ್ಯ ಸಿ.ಎಂ.ಲಿಂಗಪ್ಪ ಅವರ ಪುತ್ರನೂ ಆಗಿರುವ ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಚಂದ್ರಶೇಖರ್‌ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

Add Asianetnews Kannada as a Preferred SourcegooglePreferred

ಬುಧವಾರ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿದ ನಂತರ ಚಂದ್ರಶೇಖರ್‌ ಅವರು ತಮ್ಮ ಹಲವು ಬೆಂಬಲಿಗರೊಂದಿಗೆ ಅಧಿಕೃತವಾಗಿ ಬಿಜೆಪಿ ಪಾಳೆಯಕ್ಕೆ ಸೇರ್ಪಡೆಗೊಂಡರು. 

ಚಂದ್ರಶೇಖರ್‌ ಅವರಿಗೇ ಟಿಕೆಟ್‌ ನೀಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ರುದ್ರೇಶ್‌ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೀಶ್ವರ್‌ ನೇತೃತ್ವದಲ್ಲಿ ಆಗಮಿಸಿದ ಚಂದ್ರಶೇಖರ್‌ ಅವರು ಯಡಿಯೂರಪ್ಪ ಅವರೊಂದಿಗಿನ ಸಮಾಲೋಚನೆ ಬಳಿಕ ಪಕ್ಷ ಸೇರ್ಪಡೆಗೆ ಒಪ್ಪಿಕೊಂಡರು.

 ಟಿಕೆಟ್‌ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳದಿದ್ದರೂ ರುದ್ರೇಶ್‌ ಮತ್ತು ಯೋಗೀಶ್ವರ್‌ ಅವರಿಬ್ಬರೂ ಸ್ಪರ್ಧಿಸಲು ಹಿಂದೇಟು ಹಾಕುತ್ತಿರುವುದರಿಂದ ಚಂದ್ರಶೇಖರ್‌ ಅವರನ್ನೇ ಬಿಜೆಪಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ನಿರೀಕ್ಷೆಯಿದೆ. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ತೀರ್ಮಾನ ಹೊರಬೀಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.