ರಾಮನಗರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಇಲ್ಲಿ ಜೆಡಿಎಸ್ ನಿಂದ ಸ್ಪರ್ಧೆ ಮಾಡಲು ಅಭ್ಯರ್ಥಿಯನ್ನು ದೇವೇಗೌಡರ ಕುಟುಂಬದಿಂದಲೇ ಆಯ್ಕೆ ಮಾಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಅನಿತಾ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. 

ಚನ್ನಪಟ್ಟಣ :  ರಾಮನಗರ ಉಪಚುನಾವಣೆಗೆ ಜೆಡಿಎಸ್‌ನಿಂದ ಸ್ಪ​ರ್ಧಿಸಲು ನಾನು ಇಚ್ಛಿಸಿದ್ದೇನೆ. ಆದರೆ, ಅಂತಿಮ ತೀರ್ಮಾನವನ್ನು ನಮ್ಮ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ. ಅವರ ತೀರ್ಮಾನಕ್ಕೆ ನಾನು ಬದ್ಧ ಎಂದು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಲ್ಲಿನ ತಾಪಂ ಕಚೇರಿ ಆವರಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಸ್ಪ​ರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಚುನಾವಣೆ ನಿಗ​ದಿಯಾದ ಬಳಿಕ ಮಾಜಿ ಪ್ರಧಾನಿಗಳಾದ ದೇವೇಗೌಡರು ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಕ್ತ ನಿರ್ಧಾರ ತೆಗೆದು ಕೊಳ್ಳಲಿದ್ದಾರೆ ಎಂದರು.

ನಿಗದಿತ ದಿನಾಂಕದಂತೆ ಕುಮಾರಸ್ವಾಮಿ ಅವರು ಬಜೆಟ್‌ ಮಂಡಿಸಲಿದ್ದು, ಬಜೆಟ್‌ ಮೂಲಕ ಚುನಾವಣೆಯ ಸಮಯದಲ್ಲಿ ಪಕ್ಷ ನೀಡಿದ್ದ ಭರವಸೆಯನ್ನು ಈಡೇರಿಸಲಿದ್ದಾರೆ. ಬಜೆಟ್‌ ತಯಾರಿಯಲ್ಲಿ ಕುಮಾರಸ್ವಾಮಿ ನಿರತರಾಗಿದ್ದು, ಬಜೆಟ್‌ ಮುಗಿದ ಬಳಿಕ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.

ಸಾಲಮನ್ನಾ ಖಚಿತ: ಚುನಾವಣೆ ಸಮಯದಲ್ಲಿ ಮತದಾರರಿಗೆ ಕೊಟ್ಟಮಾತಿನಂತೆ ಕುಮಾರಸ್ವಾಮಿ ಸಾಲ ಮನ್ನಾ ಮಾಡಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.