15ನೇ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿರುವ ಕೆ.ಆರ್. ರಮೇಶ್ಕುಮಾರ್ ಅವರು ಶ್ರೀನಿವಾಸಪುರ ಕ್ಷೇತ್ರವನ್ನು ಆರು ಬಾರಿ ಪ್ರತಿನಿಧಿಸಿದ್ದಾರೆ. ಅಲ್ಲದೆ ಎರಡನೇ ಬಾರಿಗೆ ಸ್ಪೀಕರ್ ಹುದ್ದೆ ಅಲಂಕರಿಸುತ್ತಿರುವ ಮೊದಲ ವ್ಯಕ್ತಿ ಎಂಬ ಇತಿಹಾಸ ದಾಖಲಿಸಿದ್ದಾರೆ.
ಬೆಂಗಳೂರು : 15ನೇ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿರುವ ಕೆ.ಆರ್. ರಮೇಶ್ಕುಮಾರ್ ಅವರು ಶ್ರೀನಿವಾಸಪುರ ಕ್ಷೇತ್ರವನ್ನು ಆರು ಬಾರಿ ಪ್ರತಿನಿಧಿಸಿದ್ದಾರೆ. ಅಲ್ಲದೆ ಎರಡನೇ ಬಾರಿಗೆ ಸ್ಪೀಕರ್ ಹುದ್ದೆ ಅಲಂಕರಿಸುತ್ತಿರುವ ಮೊದಲ ವ್ಯಕ್ತಿ ಎಂಬ ಇತಿಹಾಸ ದಾಖಲಿಸಿದ್ದಾರೆ.
40 ವರ್ಷಗಳ ಸುದೀರ್ಘ ರಾಜಕೀಯ ಇತಿಹಾಸ ಹೊಂದಿರುವ ಅವರು ಶ್ರೀನಿವಾಸಪುರ ಕ್ಷೇತ್ರದಿಂದ ಹತ್ತು ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1978ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, 1985ರಲ್ಲಿ ಜನತಾ ಪಕ್ಷದ ಅಭ್ಯರ್ಥಿಯಾಗಿ, 1994ರಲ್ಲಿ ಜನತಾದಳದಿಂದ, 2004ರಲ್ಲಿ ಕಾಂಗ್ರೆಸ್ನಿಂದ ಜಯಗಳಿಸಿದ್ದ ಅವರು 2008ರಲ್ಲಿ ಜೆಡಿಎಸ್ ಅಭ್ಯರ್ಥಿ ಎದುರು ಸೋತಿದ್ದರು. ಬಳಿಕ 2013- 2018ರ ಚುನಾವಣೆಯಲ್ಲಿ ಸತತವಾಗಿ ಗೆಲುವು ಕಂಡಿದ್ದಾರೆ.
ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಮೇಶ್ ಕುಮಾರ್ ಸ್ಪೀಕರ್ ಆಗಿ ಜವಾಬ್ದಾರಿ ನಿರ್ವಹಿಸಿದ್ದರು. ಇದಾಗಿ 24 ವರ್ಷಗಳ ನಂತರ ಮತ್ತೆ ಅದೇ ಹುದ್ದೆಯನ್ನು ರಮೇಶ್ಕುಮಾರ್ ಅಲಂಕರಿಸಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿರುವ ಅವರು, ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಕಡಿವಾಣ ಹಾಕಲು ಕೆಪಿಎಂಇ ಕಾಯ್ದೆ ಜಾರಿಗೆ ತರುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದರು.
