ವಿಧಾನಸಭೆಗೆ ರಮ್ಯಾ ಸ್ಪರ್ಧೆ ಖಚಿತ ಮಂಡ್ಯ ಅಥವಾ ಬಸವನಗುಡಿ ಕ್ಷೇತ್ರದಿಂದ ಕಣಕ್ಕೆ: ಸಚಿವ ಡಿಕೆಶಿ ರಮ್ಯಾ ಟಿಕೆಟ್ ಕೇಳಿಲ್ಲ, ಜನರಿಂದಲೇ ಸ್ಪರ್ಧೆಗೆ ಒತ್ತಡ: ಡಿಕೆಸು

ಬೆಂಗಳೂರು: ಮಾಜಿ ಸಂಸದೆ ರಮ್ಯಾ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗುವುದು ಖಚಿತ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಅಥವಾ ಬಸವನಗುಡಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳವಾರ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ವಿಷಯ ಖಚಿತಪಡಿಸಿದ ಇಂಧನ ಸಚಿವ ಡಿ.ಕೆ. ಶಿವಕುಮಾರ್, ರಮ್ಯಾ ಅವರು ಎಐಸಿಸಿಯ ಸಾಮಾಜಿಕ ಜಾಲತಾಣ ವಿಭಾಗದ ಜವಾಬ್ದಾರಿ ಹೊತ್ತಿದ್ದಾರೆ.

ಇನ್ನು ಮುಂದೆ ರಾಜ್ಯ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಲಿದ್ದಾರೆ. ಪಕ್ಷದ ಉಪಾಧ್ಯಕ್ಷರಾಗಿರುವ ರಾಹುಲ್‌ಗಾಂಧಿ ಅವರ ತೀರ್ಮಾನಕ್ಕೆ ಬದ್ಧರಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು. ಅಲ್ಲದೆ, ರಮ್ಯಾ ಅವರು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕಿ. ಅಲ್ಲದೆ, ನನ್ನ ನೇತೃತ್ವದ ಕೆಪಿಸಿಸಿ ಪ್ರಚಾರ ಸಮಿತಿ ಯಲ್ಲೂ ರಮ್ಯಾ ಅವರು ಇದ್ದಾರೆ. ಅದರಲ್ಲಿಯೂ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದರು.

ರಮ್ಯಾ ಟಿಕೆಟ್ ಕೇಳಿಲ್ಲ: ಇದೇ ಸಂದರ್ಭದಲ್ಲಿ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯಿಸಿ, ರಮ್ಯಾ ಅವರು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲು ಟಿಕೆಟ್ ಕೇಳಿಲ್ಲ. ಬದಲಾಗಿ ಜನರೇ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಅವರು ಮಾಜಿ ಸಂಸದೆ ಹಾಗಾಗಿ ಮಂಡ್ಯ ದಲ್ಲಿ ಮನೆ ಮಾಡಿದ್ದಾರೆ ಎಂದು ಹೇಳಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಅಥವಾ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಹೈಕಮಾಂಡ್ ಆದೇಶಿಸಿದರೆ ಸ್ಪರ್ಧಿಸು ತ್ತೇನೆ. ಸದ್ಯ ನಾನು ಸಂಸದನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಸುರೇಶ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.