ಕಳೆದ ತಿಂಗಳವರೆಗೂ ಯಡಿಯೂರಪ್ಪಗೆ ತಾನು ಶಿಕಾರಿಪುರದಿಂದ ಸ್ಪರ್ಧಿಸಿ ಪುತ್ರ ರಾಘವೇಂದ್ರ ಅವರನ್ನು ರಾಣೆಬೆನ್ನೂರಿನಿಂದ ಕಣಕ್ಕಿಳಿಸಬೇಕು ಎಂದು ಮನಸ್ಸಿನಲ್ಲಿ ಇತ್ತಾದರೂ ಹೈಕಮಾಂಡ್ ಬಾಗಲಕೋಟೆ ಅಥವಾ ವಿಜಯಪುರ ಜಿಲ್ಲೆಯಲ್ಲಿ ಸ್ಪರ್ಧಿಸಿದರೆ ಅನುಕೂಲ. ಒಂದು ವಾತಾವರಣ ಸೃಷ್ಟಿಯಾಗುತ್ತದೆ ಎಂದು ಹೇಳಿದ್ದರಿಂದ ಯಡಿಯೂರಪ್ಪನವರು ತೇರದಾಳ ಕ್ಷೇತ್ರ ಆಯ್ದುಕೊಂಡಿದ್ದಾರೆ.

ಇಂಡಿಯಾ ಗೇಟ್ | ದೆಹಲಿಯಿಂದ ಕಂಡ ರಾಜಕಾರಣ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಾಗಲಕೋಟೆ ಜಿಲ್ಲೆಯ ತೇರದಾಳ ವಿಧಾನಸಭಾ ಕ್ಷೇತ್ರದಿಂದ ಸಚಿವೆ ಉಮಾಶ್ರೀ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ನಿರ್ಧರಿಸಿದ್ದಾರೆಂಬ ಸುದ್ದಿ ದೆಹಲಿ ರಾಜಕೀಯ ವಲಯದಲ್ಲಿ ನಿಚ್ಚಳವಾಗಿದೆ. ನಿನ್ನೆ ದೆಹಲಿಗೆ ಬಂದಾಗ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಮತ್ತು ಪಿಯೂಷ್ ಗೋಯಲ್ ಎದುರು ಯಡಿಯೂರಪ್ಪ ತೇರದಾಳದಿಂದ ಚುನಾವಣೆಗೆ ಸ್ಪರ್ಧಿಸುವ ವಿಷಯ ಹೇಳಿದ್ದು, ಅದು ಲಿಂಗಾಯತರು ಮತ್ತು ನೇಕಾರರು ಜಾಸ್ತಿ ಇರುವ ಕ್ಷೇತ್ರ, ಹೀಗಾಗಿ ನನಗೆ ಸುಲಭವಾಗಲಿದೆ ಎಂದು ಕೂಡ ಹೇಳಿದ್ದಾರೆ ಎನ್ನಲಾಗಿದೆ. ಕಳೆದ ತಿಂಗಳವರೆಗೂ ಯಡಿಯೂರಪ್ಪಗೆ ತಾನು ಶಿಕಾರಿಪುರದಿಂದ ಸ್ಪರ್ಧಿಸಿ ಪುತ್ರ ರಾಘವೇಂದ್ರ ಅವರನ್ನು ರಾಣೆಬೆನ್ನೂರಿನಿಂದ ಕಣಕ್ಕಿಳಿಸಬೇಕು ಎಂದು ಮನಸ್ಸಿನಲ್ಲಿ ಇತ್ತಾದರೂ ಹೈಕಮಾಂಡ್ ಬಾಗಲಕೋಟೆ ಅಥವಾ ವಿಜಯಪುರ ಜಿಲ್ಲೆಯಲ್ಲಿ ಸ್ಪರ್ಧಿಸಿದರೆ ಅನುಕೂಲ. ಒಂದು ವಾತಾವರಣ ಸೃಷ್ಟಿಯಾಗುತ್ತದೆ ಎಂದು ಹೇಳಿದ್ದರಿಂದ ಯಡಿಯೂರಪ್ಪನವರು ತೇರದಾಳ ಕ್ಷೇತ್ರ ಆಯ್ದುಕೊಂಡಿದ್ದಾರೆ. ಯಡಿಯೂರಪ್ಪ ಅಲ್ಲಿನ ಮಾಜಿ ಶಾಸಕ ಸಿದ್ದು ಸವದಿ ಅವರನ್ನು ಕೂಡ ಕರೆಸಿಕೊಂಡು ನಿಮಗೆ ವಿಧಾನಪರಿಷತ್ ಟಿಕೆಟ್ ಕೊಡುತ್ತೇವೆ ಎಂದು ಮನವೊಲಿಸಿದ್ದಾರೆ ಎಂದು ತಿಳಿದುಬಂದಿದೆ. ಜಮಖಂಡಿಗೆ ಹತ್ತಿಕೊಂಡು ಇರುವ ತೇರದಾಳ ರಬಕವಿ, ಬನಹಟ್ಟಿಗಳನ್ನೊಳಗೊಂಡಿರುವ ಕ್ಷೇತ್ರದಲ್ಲಿ ನೇಕಾರರ ಸಂಖ್ಯೆ ಜಾಸ್ತಿ ಇರುವುದರಿಂದಲೇ 2008ರಲ್ಲಿ ಉಮಾಶ್ರೀ ಇಲ್ಲಿಗೆ ಬಂದು ಚುನಾವಣೆಗೆ ನಿಂತು, ಒಮ್ಮೆ ಸೋತು 2013ರಲ್ಲಿ ಗೆದ್ದಿದ್ದರು.

ಸಿದ್ಧಗಂಗಾ ಮಠದಿಂದ ಪರಿವರ್ತನೆ?
ನವೆಂಬರ್‌'ನಲ್ಲಿ ಪ್ರಾರಂಭವಾಗಲಿರುವ ಪರಿವರ್ತನಾ ಯಾತ್ರೆಯನ್ನು ತುಮಕೂರಿನ ಸಿದ್ಧಗಂಗಾ ಮಠದಿಂದ ಆರಂಭಿಸಲು ಯಡಿಯೂರಪ್ಪ ಯೋಚಿಸುತ್ತಿದ್ದು, ದೆಹಲಿಯಲ್ಲಿ ಭಾನುವಾರ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ವಿಷಯವನ್ನು ವಿಸ್ತೃತವಾಗಿ ಚರ್ಚಿಸಲಾಗಿದೆ. ಸಿದ್ದರಾಮಯ್ಯ ಲಿಂಗಾಯತ- ವೀರಶೈವ ದಾಳವನ್ನು ಎಸೆದಿರುವುದರಿಂದ ದ್ವಂದ್ವದಲ್ಲಿರುವ ಲಿಂಗಾಯತ ಮತದಾರರನ್ನು ದೃಷ್ಟಿಯಲ್ಲಿಟ್ಟುಕೊಂಡು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದು ಯಾತ್ರೆ ಹೊರಟರೆ ಸಮುದಾಯಕ್ಕೆ ಹೋಗಬೇಕಾದ ಸಂದೇಶ ಹೋಗುತ್ತದೆ ಎಂಬುದು ಯಡಿಯೂರಪ್ಪ ಮನಸ್ಸಿನಲ್ಲಿದೆ. ಆದರೆ, ಶಾ ಒಪ್ಪಿಗೆಗಾಗಿ ಕಾಯಲಾಗುತ್ತಿದೆ.

(ಈ ಲೇಖನದ ಪೂರ್ಣ ಭಾಗಕ್ಕೆ ಇಲ್ಲಿ ಕ್ಲಿಕ್ ಮಾಡಿ)

- ಪ್ರಶಾಂತ್ ನಾತು, ಸುವರ್ಣ ನ್ಯೂಸ್