ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶ ರದ್ದು
ವಿಧಾನಸಭಾ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದ ಕಾರಣ ಅಮಾನತಿನಲ್ಲಿಡಲಾಗಿದ್ದ ಆದೇಶವನ್ನು ರಾಜ್ಯ ಸರ್ಕಾರವು ಹಿಂಪಡೆದಿದೆ.
ಬೆಂಗಳೂರು: ವಿಧಾನಸಭಾ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದ ಕಾರಣ ಅಮಾನತಿನಲ್ಲಿಡಲಾಗಿದ್ದ ಆದೇಶವನ್ನು ರಾಜ್ಯ ಸರ್ಕಾರವು ಹಿಂಪಡೆದಿದೆ.
ಏಳು ಐಎಎಸ್ ಅಧಿಕಾರಿಗಳ ಪೈಕಿ ಎಂ.ವಿ.ಜಯಂತಿ ಮತ್ತು ವೀಣಾ ಚೈತ್ರಾ ಅವರನ್ನು ಹೊರತುಪಡಿಸಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದ ವೇಳೆ ರಾಜ್ಯ ಸರ್ಕಾರವುಜ.22ರಂದು ರೋಹಿಣಿ ಸಿಂಧೂರಿ ಸೇರಿದಂತೆ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು.
ಚುನಾವಣೆ ಆಯೋಗದ ಗಮನಕ್ಕೆ ತರದೆ ವರ್ಗಾವಣೆಗೊಳಿಸಿದ ಹಿನ್ನೆಲೆಯಲ್ಲಿ ಆಯೋಗವು ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ವರ್ಗಾವಣೆ ಆದೇಶವನ್ನು ಅಮಾನತಿನಲ್ಲಿರಿಸಿದ್ದ ಸರ್ಕಾರ, ಇದೀಗ ಆದೇಶವನ್ನು ವಾಪಸ್ ಪಡೆದಿದೆ.