ರಮೇಶ್ ಕೈ ಬಿಟ್ಟು ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ?
ರಾಜ್ಯ ರಾಜಕಾರಣದಲ್ಲಿ ಹಲವಾರು ರೀತಿಯ ಬೆಳವಣಿಗೆಗಳಾಗುತ್ತಿದ್ದು ಇದೀಗ ರಮೇಶ್ ಜಾರಕಿಹೊಳಿ ಅವರನ್ನು ಕೈ ಬಿಟ್ಟು ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ನಾಯಕರು ಚಿಂತನೆ ಆರಂಭಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಬಾಳುವಿಕೆಯ ಪ್ರಶ್ನೆ ಹುಟ್ಟುವಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಆರೋಪಿಸಲಾಗುತ್ತಿರುವ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈ ಬಿಡುವ ಬಗ್ಗೆ ಕಾಂಗ್ರೆಸ್ ನಾಯಕರು ಚಿಂತನೆ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಚಿವ ಸಂಪುಟ ವಿಸ್ತರಣೆ ವೇಳೆ ರಮೇಶ್ ಜಾರಕಿಹೊಳಿ ಅವರನ್ನು ಕೈ ಬಿಟ್ಟು ಅವರ ಸಹೋದರ ಸತೀಶ್ ಜಾರಕಿಹೊಳಿ ಅವರನ್ನುಸಂಪುಟಕ್ಕೆ ತೆಗೆದುಕೊಳ್ಳುವುದು ಉತ್ತಮ ಎಂಬಚಿಂತನೆ ಈ ನಾಯಕರಲ್ಲಿ ಇದೆ. ಇದಕ್ಕೆ ಮುಖ್ಯ ಕಾರಣ ಬೆಳಗಾವಿ ರಾಜಕಾರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಅಸ್ತಿತ್ವವನ್ನೇ ಬುಡಮೇಲು ಗೊಳಿಸುವ ಬೆದರಿಕೆಯ ಮಾತುಗಳನ್ನು ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿರುವುದು ಮತ್ತುಇದಕ್ಕೆ ಪೂರಕವಾಗಿ ಗುಂಪೊಂದನ್ನು ನಿರ್ಮಿಸಲು ಅವರು ಪ್ರಯತ್ನ ನಡೆಸಿದ್ದು ಎನ್ನಲಾಗಿದೆ.
ಆದರೆ, ರಮೇಶ್ ಜಾರಕಿಹೊಳಿ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳುವ ಮೊದಲು ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಚರ್ಚಿಸಬೇಕಾದ ಅಗತ್ಯವಿದೆ. ಸದ್ಯ ವಿದೇಶ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ಸೋಮವಾರ ನಗರಕ್ಕೆ ಹಿಂತಿರುಗಲಿದ್ದಾರೆ. ಇದಾದ ನಂತರವೇ ಈ ಬಗ್ಗೆ ಗಂಭೀರ ಚರ್ಚೆಆರಂಭವಾಗಲಿದೆ ಎಂದು ಮೂಲಗಳು ಹೇಳಿವೆ.