50 ಮುಖಂಡರೊಂದಿಗೆ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ರಾಜೀನಾಮೆ ?
ಶಾಸಕ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡು ಎಐಸಿಸಿ ಸಹ ಉಸ್ತುವಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಬೆಂಗಳೂರು : ಶಾಸಕ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡು ಎಐಸಿಸಿ ಸಹ ಉಸ್ತುವಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಜಾರಕಿಹೊಳಿ ತನ್ನ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಕೆಪಿಸಿಸಿ ಸದಸ್ಯ ಮಲ್ಲಗೌಡ ಪಾಟೀಲ್ ಮಾಹಿತಿ ನೀಡಿದ್ದಾರೆ.
ಸತೀಶ್ ಜಾರಕಿಹೊಳಿಯವರಿಗೆ ಸಚಿವ ಸ್ಥಾನ ಕೈತಪ್ಪಿದ್ದು ನೋವುಂಟು ಮಾಡಿದೆ. ಹೀಗಾಗಿ ಜಿಪಂ ಸದಸ್ಯರು, ತಾಪಂ ಸದಸ್ಯರು, ಎಪಿಎಂಸಿ ಸದಸ್ಯರು, ಯಮಕನಮರ್ಡಿ ಮತ್ತು ಕಾಕತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಒಟ್ಟು 50 ಜನ ಸಾಮೂಹಿಕ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾಗಿ ಅವರು ತಿಳಿಸಿದ್ದಾರೆ.
ಇದೀಗ ಸಭೆ ಸೇರಿ ಸಾಮೂಹಿಕ ರಾಜೀನಾಮೆ ಪತ್ರ ತಯಾರಿ ಮಾಡಲಾಗುತ್ತದೆ. ಸಂಜೆ ಶಾಸಕ ಸತೀಶ್ ಜಾರಕಿಹೊಳಿಯವರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಕಾಂಗ್ರೆಸ್ ನಿಂದ ಕೇವಲ 15 ಮಂದಿಗೆ ಮಾತ್ರವೇ ಮೊದಲ ಹಂತದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಇದರಿಂದ ಈಗಾಗಲೇ ಅನೇಕ ನಾಯಕರು ಅಸಮಾಧಾನಗೊಂಡಿದ್ದು, ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲು ಸಜ್ಜಾಗಿದ್ದಾರೆ. ಇದೀಗ ಈ ಸಾಲಿಗೆ ಸತೀಶ್ ಜಾರಕಿಹೊಳಿ ಅವರು ಸೇರಿದ್ದು, ಎಐಸಿಸಿ ಸಹ ಉಸ್ತುವಾರಿ ಹುದ್ದೆಗೆ ರಾಜೀನಾಮೆ ಸಲ್ಲಿಕೆ ಮಾಡುವುದಾಗಿ ರಾಜೀನಾಮೆ ಪತ್ರವನ್ನು ರಾಹುಲ್ ಗಾಂಧಿಗೆ ರವಾನಿಸಿದ್ದಾರೆ.