23 ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ : ಡಿಸಿಎಂ ಪರಮೇಶ್ವರ್
ರಾಜ್ಯದ 23 ಜಿಲ್ಲೆಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು [ಜು.20]: ವಿಶ್ವವಿದ್ಯಾಲಯಗಳು ಹಾಗೂ ಜಿಲ್ಲಾಡಳಿತಗಳ ಸಹಯೋಗದಲ್ಲಿ ರಾಜ್ಯದ 23 ಜಿಲ್ಲೆಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪಿಸಲಾಗುವುದು ಎಂದು ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾಗಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಕೇಳಿದ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಲ್ಲಿ ಧಾರವಾಡ ಮತ್ತು ಮಂಗಳೂರಿನಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪಿಸಲಾಗಿದೆ.
ಗಲಕೋಟೆ, ಕೊಪ್ಪಳ, ದಾವಣಗೆರೆ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಕಲಬುರಗಿ ಜಿಲ್ಲೆಯ ಚಿತ್ತಾಪುರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಚಾಮರಾಜನರ, ವಿಜಯಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಪ್ರಾರಂಭಿಸುವ ಸಲುವಾಗಿ ನಕ್ಷೆ ತಯಾರಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುತ್ತಿದೆ. ಹಾಸನ, ಕೊಡಗು ಜಿಲ್ಲೆಯ ಮಡಿಕೇರಿ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಡುಪಿ, ಶಿವಮೊಗ್ಗ, ಬೆಳಗಾವಿ, ಯಾದಗಿರಿ, ಗದಗ, ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಂತ ಹಂತವಾಗಿ ಉಪ ಪ್ರಾದೇಶಿಕ ಕೇಂದ್ರ ಸ್ಥಾಪಿಸಲಾಗುವುದು ಎಂದು ಹೇಳಿದರು.