ಮುಂದಿನ ಚುನಾವಣೆಗಳಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಇಲ್ಲ: ಶಿವಸೇನೆ
- ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಾ ಬಂದಿದ್ದ ಶಿವಸೇನೆ
- 2019ರ ಲೋಕಸಭಾ ಚುನಾವಣೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಇಲ್ಲ
ಮುಂಬೈ: ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಾ ಬಂದಿದ್ದ ಶಿವಸೇನೆಯು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಹಳೆಯ ಮೈತ್ರಿಯನ್ನು ತೊರೆಯುವುದಾಗಿ ಹೇಳಿದೆ.
ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಶಿವಸೇನೆ ಸಂಸದ ಸಂಜಯ್ ರಾವತ್ ಈ ಬಗ್ಗೆ ಪ್ರಸ್ತಾಪವನ್ನು ಮುಂದಿಟ್ಟರು. ಚರ್ಚೆಯ ಬಳಿಕ ಪಕ್ಷದ ಕಾರ್ಯಕಾರಿಣಿಯು ಸರ್ವಾನುಮತದಿಂದ ಅದನ್ನು ಅನುಮೋದಿಸಿದೆ.
ಕಳೆದ ಮೂರು ವರ್ಷಗಳಿಂದ ಬಿಜೆಪಿಯು ಶಿವಸೇನೆಯ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡುತ್ತಿದೆ. ಆದುದರಿಂದ 2019ರ ಲೋಕಸಭಾ ಚುನಾವಣೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಯನ್ನು ಏಕಾಂಗಿಯಾಗಿಯೇ ಎದುರಿಸಬೇಕೆಂದು ಪ್ರಸ್ತಾಪಿಸಿದ್ದೇನೆ, ಎಂದು ರಾವತ್ ಈ ಸಂದರ್ಭದಲ್ಲಿ ಹೇಳಿದ್ದಾರೆ.
48 ಲೋಕಸಭಾ ಸ್ಥಾನಗಳ ಪೈಕಿ ಶಿವಸೇನೆಯು ಕನಿಷ್ಠ 25, ಹಾಗೂ 125 (288ರ ಪೈಕಿ) ವಿಧಾನಸಭಾ ಸ್ಥಾನಗಳನ್ನು ಗೆಲ್ಲುವುದು ಎಂದು ರಾವತ್ ಹೇಳಿದ್ದಾರೆ.
ಹಿಂದುತ್ವಕ್ಕಾಗಿ ಶಿವಸೇನೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಆದರೆ ಬಿಜೆಪಿಯು ಅಧಿಕಾರವನ್ನು ಬಳಸಿ ಪಕ್ಷದ ಸ್ಥೈರ್ಯವನ್ನು ಕುಗ್ಗಿಸುವ ಕೆಲಸವನ್ನು ಕಳೆದ 3 ವರ್ಷಗಳಿಂದ ಮಾಡುತ್ತಿದೆ, ಎಂದು ರಾವತ್ ಹೇಳಿದ್ದಾರೆ.