ಕೇರಳದ ಪ್ರತಿಷ್ಠಿತ ಶಬರಿಮಲೆ ದೇವಸ್ಥಾನಕ್ಕೆ 10-50 ವರ್ಷದ ಮಹಿಳೆಯರಿಗೆ ಪ್ರವೇಶ ನಿಷೇಧವನ್ನು ತೆರವುಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಇದನ್ನು ವಿರೋಧಿಸಿ ರಾಜ್ಯದಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಆದರೂ, ತೀರ್ಪಿಗೆ ಸಂಬಂಧಿಸಿದಂತೆ ಯಾವುದೇ ಮರುಪರಿಶೀಲನಾ ಅರ್ಜಿಯನ್ನು ಕೇರಳ ಸರಕಾರ ಸಲ್ಲಿಸುವುದಿಲ್ಲವಂತೆ.

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ಮಂದಿರಕ್ಕೆ ಮಹಿಳೆಯರಿಗೂ ಪ್ರವೇಶ ಕಲ್ಪಿಸಬೇಕೆಂಬ ಸುಪ್ರೀಂ ತೀರ್ಪು ಖಂಡಿಸಿ ಕೇರಳದ ವಿವಿಧ ಭಾಗಗಳಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಹೊರತಾಗಿಯೂ, ಸುಪ್ರೀಂ ತೀರ್ಪಿನ ವಿರುದ್ಧ ಮರು ಪರಿಶೀಲನಾ ಅರ್ಜಿ ಸಲ್ಲಿಕೆ ಮಾಡಬೇಕೆಂಬ ಯಾವುದೇ ಯೋಚನೆಗಳು ತಮಗಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದ ಸರ್ಕಾರ ಸ್ಪಷ್ಟಪಡಿಸಿದೆ.

Add Asianetnews Kannada as a Preferred SourcegooglePreferred

ಈ ಬಗ್ಗೆ ಬುಧವಾರ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ‘ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ) ಸಹ, ಸುಪ್ರೀಂ ತೀರ್ಪಿನ ವಿರುದ್ಧ ಮರು ಪರಿಶೀಲನೆ ಅರ್ಜಿ ಸಲ್ಲಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ,’ ಎಂದರು.

ಶಬರಿಮಲೆಗೆ ಸಂಬಂಧಿಸಿದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಲ್ಲದೆ, ಸುಪ್ರೀಂ ಕೋರ್ಟ್‌ ತೀರ್ಪಿನ ಪಾಲನೆಗಾಗಿ ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ನಡುವೆ, ದೇವಸ್ಥಾನದ ಸಂಪ್ರಾದಾಯ ಹಾಗೂ ನಂಬಿಕೆಗಳ ರಕ್ಷಣೆಗಾಗಿ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಆಗ್ರಹಿಸುತ್ತಿವೆ.