ಕಾಂಗ್ರೆಸ್ ಶಾಸಕರೋರ್ವರನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ದೂರು ದಾಖಲಿಸಲಾಗಿದೆ. ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ದೂರು ದಾಖಲಿಸಿದ್ದಾರೆ. 

ಬೆಂಗಳೂರು [ಜು.19] : ಕಾಂಗ್ರೆಸ್‌ ಶಾಸಕ ಶ್ರೀಮಂತ ಪಾಟೀಲ್‌ ಅವರನ್ನು ಅಪಹರಣ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿದ್ದರಾಮಯ್ಯ ಅವರು ಕೊಟ್ಟದೂರಿನ ಮೇರೆಗೆ ಮಾಜಿ ಸಚಿವ, ಬಿಜೆಪಿ ಮುಖಂಡ ಲಕ್ಷ್ಮಣ ಸವದಿ ಸೇರಿ ಇತರರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಅಧಿವೇಶನದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕರು ಉಳಿದುಕೊಳ್ಳಲು ದೇವನಹಳ್ಳಿ ಸಮೀಪ ಇರುವ ಪ್ರಕೃತಿ ವಿಂಡ್‌ಪ್ಲವರ್‌ ರೆಸಾರ್ಟ್‌ನಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇದೇ ರೆಸಾರ್ಟ್‌ನಲ್ಲಿ ಕಾಗವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಶ್ರೀಮಂತ ಪಾಟೀಲ್‌ ಕೂಡ ಇದ್ದರು. ಗುರುವಾರ ವಿಶ್ವಾಸ ಮತಯಾಚನೆ ವೇಳೆ ಸದನದಲ್ಲಿ ಖುದ್ದು ಹಾಜರಿರುವಂತೆ ವಿಪ್‌ ಜಾರಿ ಮಾಡಲಾಗಿತ್ತು. ಆದರೆ ರಾತ್ರೋರಾತ್ರಿ ಬಿಜೆಪಿ ಮುಖಂಡ ಲಕ್ಷ್ಮಣ್‌ ಸವದಿ ಹಾಗೂ ಇತರರು ಶ್ರೀಮಂತ ಪಾಟೀಲ್‌ ಅವರನ್ನು ಅಪಹರಣ ಮಾಡಿದ್ದಾರೆ ಎಂದು ದೂರಿನಲ್ಲಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ಈ ಸಂಬಂಧ ಲಕ್ಷ್ಮಣ್‌ ಸವದಿ ಸೇರಿ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಶಾಸಕ ಶ್ರೀಮಂತ ಪಾಟೀಲ್‌ ಹೇಳಿಕೆ ಪಡೆಯಲು ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್‌ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಈ ತಂಡ ತಂಡ ಶ್ರೀಮಂತ ಪಾಟೀಲ್‌ ಅವರು ಚಿಕಿತ್ಸೆ ಪಡೆಯುತ್ತಿರುವ ಹೋಟೆಲ್‌ಗೆ ತೆರಳಿ ಹೇಳಿಕೆ ಪಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.