ಅಕ್ರಮ ಶಸ್ತ್ರಾಸ್ತ್ರ ಕಾಯ್ಡೆಯಡಿ ಮದ್ದೂರು ತಾಲೂಕಿನ ಹಿಂದೂ ಪರ ಸಂಘಟನೆಯ ಕಾರ್ಯಕರ್ತನೊಬ್ಬನ ಎಸ್‌ಐಟಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಂಜುನಾಥ ಅಲಿಯಾಸ್‌ ಹೊಟ್ಟೆಮಂಜ ಎಂಬಾತನೇ ಸೆರೆಯಾಗಿದ್ದು, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದಲ್ಲಿ ಆತನ ಬಂಧನವಾಗಿದೆ ಎಂದು ವಂದತಿಗಳು ಹರಡಿವೆ.

ಬೆಂಗಳೂರು : ಅಕ್ರಮ ಶಸ್ತ್ರಾಸ್ತ್ರ ಕಾಯ್ಡೆಯಡಿ ಮದ್ದೂರು ತಾಲೂಕಿನ ಹಿಂದೂ ಪರ ಸಂಘಟನೆಯ ಕಾರ್ಯಕರ್ತನೊಬ್ಬನ ಎಸ್‌ಐಟಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಂಜುನಾಥ ಅಲಿಯಾಸ್‌ ಹೊಟ್ಟೆಮಂಜ ಎಂಬಾತನೇ ಸೆರೆಯಾಗಿದ್ದು, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದಲ್ಲಿ ಆತನ ಬಂಧನವಾಗಿದೆ ಎಂದು ವಂದತಿಗಳು ಹರಡಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಕ್ರಮಶಸ್ತ್ರಾಸ್ತ್ರ ಕುರಿತು ಮಾಹಿತಿ ಕಲೆ ಹಾಕುವಾಗ ಮದ್ದೂರಿನ ಮಂಜುನಾಥನ ಬಗ್ಗೆ ಸುಳಿವು ಸಿಕ್ಕಿತು. ಈ ಸುಳಿವು ಆಧರಿಸಿ ಆತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ. ಅನುಮಾನದ ಮೇರೆಗೆ ಗೌರಿ ಲಂಕೇಶ್‌ ಪ್ರಕರಣದಲ್ಲಿ ಸಹ ಪ್ರಶ್ನಿಸಲಾಯಿತು. ಆದರೆ ಆತನ ಪಾತ್ರವಿರುವುದು ಖಚಿತವಾಗಿಲ್ಲ ಎಂದು ಉನ್ನತ ಮೂಲಗಳು ‘ಕನ್ನಡಪ್ರಭ’ಕ್ಕೆ ತಿಳಿಸಿವೆ.

ಮೂರು ದಿನಗಳ ಹಿಂದೆ ಮಂಜನನ್ನು ವಶಕ್ಕೆ ಪಡೆದ ಪೊಲೀಸರು, ಆತನ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ ಎನ್ನಲಾಗಿದೆ. ಆತನಿಂದ ವಿವಿಧ ಬಂದೂಕುಗಳ ಜೀವಂತ ಗುಂಡುಗಳು ಹಾಗೂ ಒಂದು ನಾಡಾ ಪಿಸ್ತೂಲ್‌ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಮದ್ದೂರು ತಾಲೂಕಿನ ಹಿಂದೂ ಜಾಗೃತಿ ವೇದಿಕೆ ಎಂಬ ಸಂಘಟನೆಯಲ್ಲಿ ಸಕ್ರಿಯವಾಗಿರುವ ಆತ, ಶೋಕಿಗಾಗಿ ಕಳಪೆ ಮಟ್ಟದ ಬಂದೂಕು ಇಟ್ಟುಕೊಂಡಿದ್ದ. ಇದುವರೆಗೆ ಬೇರೆ ಪ್ರಕರಣಗಳಿಗೆ ಸಂಬಂಧಿಸಿದ ಯಾವುದೇ ಮಾಹಿತಿ ಪತ್ತೆಯಾಗಿಲ್ಲ. ಈ ಎಲ್ಲಾ ಆಯಾಮದಲ್ಲೂ ತನಿಖೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನೊಂದೆಡೆ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದ ಸಂಬಂಧ ಯಾರನ್ನೂ ಬಂಧಿಸಿಲ್ಲ. ಈ ಬಗ್ಗೆ ಕೆಲವು ಸುಳ್ಳು ಸುದ್ದಿ ಪ್ರಚಾರವಾಗಿವೆ ಎಂದು ಪ್ರಕರಣದ ತನಿಖಾಧಿಕಾರಿಯೂ ಆಗಿರುವ ಪಶ್ಚಿಮ ವಿಭಾಗ ಡಿಸಿಪಿ ಎಂ.ಎನ್‌. ಅನುಚೇತ್‌ ಸ್ಪಷ್ಟಪಡಿಸಿದ್ದಾರೆ.