ಶೀಘ್ರವೇ ಕರ್ನಾಟಕ  ಸರ್ಕಾರ ಪತನವಾಗಲಿದ್ದು ಮತ್ತೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಮುಖಂಡ ಹೇಳಿದ್ದಾರೆ. 

ಯಾದಗಿರಿ: ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಶೀಘ್ರದಲ್ಲಿಯೇ ಪತನವಾಗಲಿದೆ. ಜ್ಯೋತಿಷಿಗಳು ನುಡಿದ ಭವಿಷ್ಯದಂತೆ ಬಿ.ಎಸ್‌.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಮುಖಂಡ ಮಾಲಿಕಯ್ಯ ಗುತ್ತೇದಾರ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಪವಿತ್ರ ಮೈತ್ರಿ ಸರ್ಕಾರದಲ್ಲಿ ನಾಯಕರ ಒಳ ಜಗಳದಿಂದ ಶೀಘ್ರದಲ್ಲಿ ಸರ್ಕಾರ ಪತನವಾಗಲಿದೆ. ಸರ್ಕಾರದ ಗೊಂದಲದಿಂದಾಗಿ ಅಸಮಾಧಾನಗೊಂಡಿರುವ ಕಾಂಗ್ರೆಸ್‌ನ 20ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಬಿಜೆಪಿಯ 104 ಶಾಸಕರಲ್ಲಿ ಯಾರೊಬ್ಬರೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ತಿಳಿಸಿದರು.

ಖರ್ಗೆಗೆ ಪುತ್ರ ವ್ಯಾಮೋಹ:

ನಮ್ಮ ಭಾಗದ ಪ್ರಭಾವಿ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕುಟುಂಬ ರಾಜಕಾರಣ ಮಾಡುತ್ತಿದ್ದು, ಪುತ್ರ ವ್ಯಾಮೋಹದಿಂದ ಅವರು ಹೈದ್ರಾಬಾದ್‌ ಕರ್ನಾಟಕದ ನಾಯಕರನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಾಬುರಾವ ಚಿಂಚನಸೂರ್‌, ಡಾ.ಮಾಲಕರೆಡ್ಡಿ, ದಿವಂಗತ ಖಮರುಲ್‌ ಇಸ್ಲಾಂ ಅವರಿಗೆ ಅನ್ಯಾಯ ಮಾಡಿದ್ದಾರೆ. ಪ್ರಸ್ತುತ ಧರ್ಮಸಿಂಗ್‌ ಪುತ್ರ ಡಾ.ಅಜಯಸಿಂಗ್‌ ಅವರನ್ನೂ ಮೂಲೆಗುಂಪು ಮಾಡಿದ್ದಾರೆ. ಇಲ್ಲಿ ಯಾರಿಗೂ ಬೆಳೆಯಲು ಅವಕಾಶ ನೀಡುತ್ತಿಲ್ಲ. ಹೀಗಾಗಿ ಹೈದ್ರಾಬಾದ್‌ ಕರ್ನಾಟಕ ಭಾಗದ ಅನೇಕ ನಾಯಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದರು.