‘30ಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ’
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಪಡೆದುಕೊಂಡಿದ್ದು, ಇದೀಗ 30 ಶಾಸಕರು ಬಿಜೆಪಿಗೆ ಬರಲು ಸಜ್ಜಾಗಿದ್ದಾರೆ ಎನ್ನಲಾಗಿದೆ.
ದಾವಣಗೆರೆ: ಲೋಕಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಮೈತ್ರಿ ಛಿದ್ರಗೊಂಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ 30ಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ ಇಂದೋ ನಾಳೆಯೋ ಬರಲಿದ್ದು 2 ದಿನದಲ್ಲೇ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಲೇ ಮೈತ್ರಿ ಸರ್ಕಾರವೂ ಪತನವಾಗಲಿಯೆಂದು ಹೇಳಿದ್ದೆವು. ಈಗ ಹಾಗೆಯೇ ಆಗಲಿದೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಶಾಸಕರು ಈಗಾಗಲೇ ನಮ್ಮ ಪಕ್ಷದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮೈತ್ರಿ ಪಕ್ಷಗಳಿಂದ ಯಾರು ಯಾರು ಬರುತ್ತಾರೆಂಬುದನ್ನು ಕಾದು ನೋಡಿ ಎಂದು ಹೇಳಿದರು.
ದೇಶದ ಜನತೆ ನರೇಂದ್ರ ಮೋದಿಗೆ ಮತ್ತೊಮ್ಮೆ ಆಶೀರ್ವಾದ ಮಾಡಿದ್ದಾರೆ. ಅದರಲ್ಲೂ ರಾಜ್ಯದಲ್ಲಿ 25 ಪ್ಲಸ್ 1 ಒಟ್ಟು 26 ಸ್ಥಾನಗಳಲ್ಲಿ ಗೆಲ್ಲಿಸಿದ್ದಾರೆ ಎನ್ನುವ ಮೂಲಕ ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿ ಸೇರಬಹುದೆಂಬ ಸುಳಿವನ್ನು ಸೂಕ್ಷ್ಮವಾಗಿ ಬಿಡಿಸಿಟ್ಟರು.